ಮಾನ್ವಿ: ಮಾ. 30ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಪ್ರಭಾರ ತಹಶೀಲ್ದಾರ್ ಪರಶುರಾಮ ಮಾತನಾಡಿ, ಪರೀಕ್ಷೆ ಸುಗಮವಾಗಿ ನಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು.
ಸಿಪಿಐ ಚಂದ್ರಶೇಖರ ನಾಯ್ಕ ಮಾತನಾಡಿ, ಪರೀಕ್ಷಾ ಕೇಂದ್ರಗಳ ಭದ್ರತಾ ಕಾರ್ಯಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿ ಒದಗಿಸುವುದಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 12 ಪರೀಕ್ಷಾ ಕೇಂದ್ರಗಳಿವೆ.
ಮಾನ್ವಿಯಲ್ಲಿ 4, ಕವಿತಾಳದಲ್ಲಿ 3, ಸಿರವಾರದಲ್ಲಿ 3 ಮತ್ತು ಪೋತ್ನಾಳದಲ್ಲಿ 2 ಪರೀಕ್ಷಾ ಕೇಂದ್ರಗಳಿದ್ದು ಪ್ರತಿ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಪಾಲಕ, ಮುಖ್ಯ ಅಧೀಕ್ಷಕ, ಒಬ್ಬರು ಸ್ಥಿರ ಜಾಗೃತ ದಳದ ಸಿಬ್ಬಂದಿ ಕಾರ್ಯನಿರ್ವಹಿಸುವರು.
ಪರೀಕ್ಷಾ ಕೇಂದ್ರಗಳ ಪರಿಶೀಲನೆಗೆ ಸಂಚಾರಿ ಜಾಗೃತ ದಳ ಮತ್ತು 350ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಕೇಂದ್ರದಲ್ಲಿ ಹೆಚ್ಚುವರಿಯಾಗಿ ಸಹಾಯಕ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಶಿಕ್ಷಣ ಸಂಯೋಜಕ ವಲಿಬಾಬು ಭಾಗವಹಿಸಿದ್ದರು