ಬೆಂಗಳೂರು: ‘ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರುಪರಿಶೀಲನೆಗಾಗಿ ರಾಜ್ಯ ಸರ್ಕಾರವು ಕೂಡಲೇ ಮೇಲ್ಮನವಿ ಸಲ್ಲಿಸಬೇಕು’ ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ (ಕೆಇಬಿ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆ ಹಾಗೂ ಪ್ರಜಾ ಪರಿವರ್ತನಾ ವೇದಿಕೆಯ ಸಹಯೋಗದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪುರಭವನ ಎದುರು ಬೆಳಿಗ್ಗೆ ಸೇರಿದ್ದ ಪ್ರತಿಭಟನಾಕಾರರು ಅಲ್ಲಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಿದರು. ಬಳಿಕ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೆಇಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಕೆ.ದಾಸ್ಪ್ರಕಾಶ್, ‘ಬಡ್ತಿ ಮೀಸಲಾತಿಯು ಅವೈಜ್ಞಾನಿಕ ಎಂದು ಸುಪ್ರೀಂಕೋರ್ಟ್ ಫೆಬ್ರುವರಿ 9ರಂದು ತೀರ್ಪು ನೀಡಿದೆ. ಇದರಿಂದ ನೌಕರರಿಗೆ ಅನ್ಯಾಯವಾಗಲಿದ್ದು, ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.