ಬೆಂಗಳೂರು: ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಲ್ಲಿಸಿದ್ದ ವರದಿ ಆಧಾರದಲ್ಲಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) 19 ಪ್ರಕರಣಗಳಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದೆ.
ಎಸ್ಐಟಿ ಒಟ್ಟು 69 ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು. ಈ ಪೈಕಿ 28 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಉಳಿದ 20 ಪ್ರಕರಣಗಳ ತನಿಖೆ ಮುಂದುವರಿಯುತ್ತಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಶಾಸಕ ಅನಿಲ್ ಲಾಡ್, ವಿ.ಎಸ್. ಲಾಡ್ ಅವರಿಗೆ ಸೇರಿದ ಅದಿರು ರಫ್ತು ಕಂಪೆನಿಗಳ ವಿರುದ್ಧ ಸರ್ಕಾರಕ್ಕೆ ರಾಜಧನ ಪಾವತಿಸದೆ ಗಣಿ ರಫ್ತು ಮಾಡಿದ ಆರೋಪಗಳಿವೆ. ಆದರೆ, ತನಿಖೆ ವೇಳೆ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ‘ಬಿ’ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತನಿಖೆ ಮುಂದುವರಿದಿರುವ ಪ್ರಕರಣಗಳ ಪೈಕಿ ಎರಡರಲ್ಲಿ ಇಬ್ಬರು ಐಎಎಸ್, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳ ಹೆಸರು ಇರುವುದರಿಂದ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಕೇಳಲಾಗಿದೆ ಎಂದೂ ಹೇಳಲಾಗಿದೆ.