ಬೆಂಗಳೂರು: ‘ಶಾಲಾ-ಕಾಲೇಜುವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿರುವುದರಿಂದ ಎಲ್ಲ ಕಡೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಎಲ್ಲೂ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ’ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.
ಬಿಜೆಪಿಯ ಅರವಿಂದ ಲಿಂಬಾವಳಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಗರ-ಪಟ್ಟಣ ಪ್ರದೇಶಗಳಲ್ಲಿ 22 ರಿಂದ 24 ಗಂಟೆ, ಗ್ರಾಮೀಣ ಪ್ರದೇಶಗಳಲ್ಲಿ ನಿತ್ಯ 7 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ ರೈತರಿಗೆ ಸಂಜೆ 6ರಿಂದ ಬೆಳಿಗ್ಗೆ 6 ಗಂಟೆವರೆಗೆ 10 ಗಂಟೆಗಳ ಕಾಲ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುತ್ತಿದೆ’ ಎಂದರು.
‘ಬೇಸಿಗೆ ಆರಂಭಕ್ಕೆ ಮೊದಲೇ ನನ್ನ ಕ್ಷೇತ್ರದ (ಮಹದೇವಪುರ) ವ್ಯಾಪ್ತಿಯಲ್ಲಿ ಲೋಡ್ಶೆಡ್ಡಿಂಗ್ ಮಾಡಲಾಗುತ್ತಿದೆ. ಸಣ್ಣ ಕೈಗಾರಿಕೆಗಳು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿವೆ’ ಎಂದು ಲಿಂಬಾವಳಿ ದೂರಿದರು.
‘ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಬಾರದು ಎಂಬ ಕಾರಣಕ್ಕೆ ಒಂದು ಸಾವಿರ ಮೆಗಾವಾಟ್ ವಿದ್ಯುತ್ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಪೂರೈಕೆ ಕುರಿತಂತೆ ಎಲ್ಲ ಶಾಸಕರಿಗೂ ಸೂಕ್ತ ಮಾಹಿತಿ ನೀಡಲು ಸಿದ್ಧ’ ಎಂದರು.
‘ತುಂಗಭದ್ರಾ ನದಿಯಿಂದ ನೀರು ಪೂರೈಕೆಯಾಗದೆ ಬಳ್ಳಾರಿ ಶಾಖೋತ್ಪನ್ನ ಘಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿದೆ. ಶರಾವತಿ ವಿದ್ಯುತ್ ಸ್ಥಾವರದ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಜಲಾಶಯದ ನೀರು ಖಾಲಿ ಮಾಡಲಾಗುತ್ತಿದೆ’ ಎಂದರು.