ಬಂಗಾರಪೇಟೆ: ವಿದ್ಯುತ್ ಬೆಲೆ ಏರಿಕೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಕಾರ್ಯಕರ್ತರು ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
‘ದಶಕದಿಂದ ಜಿಲ್ಲೆಯಲ್ಲಿ ಬರ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ನಿರ್ವಹಣೆ ದುಸ್ತರವಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ವಿದ್ಯುತ್ ಶುಲ್ಕ ಏರಿಸಿರುವುದು ಖಂಡನೀಯ’ ಎಂದು ಬೇಸರ ವ್ಯಕ್ತಪಡಿಸಿದರು.
‘ಮಳೆಯ ಅಭಾವದಿಂದ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಕೂಲಿ ಅರಿಸಿ ರೈತರು ಪಟ್ಟಣಗಳಿಗೆ ತೆರಳುವಂತಾಗಿದೆ. ರೈತರ ಹಿತ ರಕ್ಷಣೆ ಮಾಡಬೇಕಾದ ಸರ್ಕಾರವೇ ರೈತರನ್ನು ಕಷ್ಟಕ್ಕೆ ದೂಡುತ್ತಿದೆ’ ಎಂದು ದೂರಿದರು.
‘ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ವಿದ್ಯುತ್ ಒದಗಿಸುತ್ತಿಲ್ಲ. ಹಾಗಾಗಿ ಕೆಲ ಕಡೆ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿವೆ. ಅವುಗಳನ್ನು ಕೂಡಲೇ ಬದಲಾಯಿಸಬೇಕು. ಮಾಹಿತಿ ನೀಡಿದ ತಕ್ಷಣ ಬೆಸ್ಕಾಂ ಅಧಿಕಾರಿಗಳು ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.
‘ನಿರಂತರ ಜ್ಯೋತಿ ಯೋಜನೆಯನ್ನು ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ವಿಸ್ತರಿಸಬೇಕು. ಅಕ್ರಮ ಸಕ್ರಮ ಯೋಜನೆಯಡಿ ಹಣ ಕಟ್ಟಿರುವ ರೈತರಿಗೆ ಕೂಡಲೆ ವಿದ್ಯುತ್ ಪರಿವರ್ತಕಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.
‘ರೈತರ ಪಂಪ್ಸೆಟ್ಗಳಿಗೆ ಹಗಲಿನಲ್ಲಿ ಗುಣಮಟ್ಟದ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡಬಾರದು’ ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕ ಅಧ್ಯಕ್ಷ ಟಿ.ಎನ್. ರಾಮೇಗೌಡ, ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ತಾಲ್ಲೂಕು ಅಧ್ಯಕ್ಷ ಘಟಕ ಗೋಪಿ, ಮುಖಂಡರಾದ ವೀರಭದ್ರಸ್ವಾಮಿ. ಲಕ್ಷ್ಮಣ, ರವಿ, ಜಯರಾಮರೆಡ್ಡಿ, ಮುರಳಿ ದೇವರಾಜ್ ಭಾಗವಹಿಸಿದ್ದರು.