ಸಿಂಧನೂರು: ಡಾ.ಬಿ.ಆರ್.ಅಂಬೇಡ್ಕರ್ ದೇಶದಲ್ಲಿ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ವಿಶ್ವಕ್ಕೆ ಮಾದರಿಯಾಗಿರುವ ಅತ್ಯುತ್ತಮ ಸಂವಿಧಾನ ರಚಿಸಿಕೊಟ್ಟ ಶ್ರೇಷ್ಠ ತಜ್ಞ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಎನ್.ಶಂಕ್ರಪ್ಪ ಬಣ್ಣಿಸಿದರು.
ತಾಲ್ಲೂಕಿನ ಆರ್.ಎಚ್.ನಂ.2 ಕ್ಯಾಂಪಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಪಂಡಿತ ದೀನದಯಾಳ್ ಉಪಾಧ್ಯಾಯ ಜನ್ಮ ಶತಮಾನೋತ್ಸವ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರದ ಮಾಜಿ ಸಚಿವೆ ದಗ್ಗುಬಾಟಿ ಪುರಂದರೇಶ್ವರಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನ್ಧನ್, ಗರೀಬಿ ಹಟಾವೋ, ಬೇಟಿ ಬಚಾವೋ ಬೇಟಿ ಪಾಠವೋ ಮತ್ತಿತರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನ ಮೆಚ್ಚುಗೆ ಪಡೆದಿದೆ. ಬಡತನ ನಿರ್ಮೂಲನೆಯೇ ಬಿಜೆಪಿ ಮೂಲ ಮಂತ್ರವಾಗಿದೆ ಎಂದರು.
ಮಾಜಿ ಸಚಿವ ರಾಜುಗೌಡ, ಬಿಜೆಪಿ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಕೊಲ್ಲಾ ಶೇಷಗಿರಿರಾವ್ ಮಾತನಾಡಿದರು. ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಗೌಡ ವಿರುಪಾಪೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಬಿಜೆಪಿ ವಿಸ್ತಾರಕ ನಿರಂಜನ ವರ್ಮಾ, ಮುಖಂಡರಾದ ರಾಜಶೇಖರ್ ಪಾಟೀಲ, ಮಧ್ವರಾಜ, ಶಶಿಧರ ಮಸ್ಕಿ, ಮಹಾಂತೇಶ ಜಾಲವಾಡಗಿ, ವೆಂಕನಗೌಡ ಮಲ್ಕಾಪುರ, ದೇವೇಂದ್ರಪ್ಪ ಯಾಪಲಪರ್ವಿ, ಅಡಿವೆಪ್ಪ ಹೋತೂರ್, ಮಮತಾ ಹಿರೇಮಠ, ತಾಲ್ಲೂಕು ಪಂಚಾಯಿತಿ ಸದಸ್ಯ ಹನುಮೇಶ, ಎಸ್ಟಿ ಮೋರ್ಚಾ ಅಧ್ಯಕ್ಷ ಹನುಮೇಶ ನಾಯಕ ಇದ್ದರು. 400ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಿ, ಉಚಿತ ಔಷಧಿಗಳನ್ನು ವಿತರಿಸಲಾಯಿತು.