ಮಡಿಕೇರಿ: ಡಾ.ಬಿ.ಆರ್. ಅಂಬೇಡ್ಕರ್ ಅವರು ಬಲಿಷ್ಠ ಪ್ರಜಾಪ್ರಭುತ್ವಕ್ಕೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವದಲ್ಲಿಯೇ ದೇಶಕ್ಕೆ ಮಾದರಿ ಯಾದ ಸಂವಿಧಾನವನ್ನು ನೀಡಿದ ಮಹಾನ್ ಮಾನವತಾವಾದಿ ಅಂಬೇಡ್ಕರ್., ಜೊತೆಗೆ ಪ್ರಬುದ್ಧ ಭಾರತ ನಿರ್ಮಾಣಕ್ಕೂ ಶ್ರಮಿಸಿದ್ದರು. ಭಾರತ ದಲ್ಲಿ ವಾಸಿಸುವ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು, ಹಕ್ಕುಗಳು ದೊರೆಯಬೇಕು ಎಂಬುದನ್ನು ಪ್ರತಿಪಾದಿಸಿದ್ದರು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಸಂವಿಧಾನದ ಮೂಲಕ ದೇಶದ ಆಡಳಿತ ವ್ಯವಸ್ಥೆಯ ಎಲ್ಲಾ ರೀತಿಯ ಸೌಲಭ್ಯಗಳೂ ಕಟ್ಟಕಡೆಯ ಪ್ರಜೆಗೂ ತಲುಪಬೇಕು ಎಂಬ ಉದ್ದೇಶದೊಂದಿಗೆ ಸಂವಿಧಾನ ರಚನೆ ಮಾಡಿದರು. ಶೋಷಿತರಿಗೆ ಸಮಾನತೆ, ಸಮಾನ ಅವಕಾಶ ಕಲ್ಪಿಸಲು ಶ್ರಮಿಸಿದರು ಎಂದು ನುಡಿದರು.
ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್, ಅಂಬೇಡ್ಕರ್ ಅವರು ಜೀವನದಲ್ಲಿ ಸಾಕಷ್ಟು ನೋವು ಅನುಭವಿಸಿ ಮೇಲೆ ಬಂದವರು, ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಸ್ವಾತಂತ್ರ್ಯ ಸಿಗಬೇಕೆಂದು ಹೋರಾಟ ನಡೆಸಿದ್ದರು ಎಂದು ಹೇಳಿದರು.
ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಸಿದ್ದರಾಜು ಬೆಳ್ಳಯ್ಯ, ರಾಷ್ಟ್ರವನ್ನು ಜಾತ್ಯತೀತ ಗಣರಾಜ್ಯ ನಿರ್ಮಾಣಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಶ್ರಮಿಸಿದರು. ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮ ಬಾಳು ಎಂಬುದನ್ನು ಪ್ರತಿಪಾದಿಸಿದ್ದರು. ಶಿಕ್ಷಣ ಪಡೆದಾಗ ಸಮಾನ ಅವಕಾಶ ಮತ್ತು ಆರ್ಥಿಕ ಪ್ರಗತಿ ಸಾಧ್ಯ. ಆದ್ದರಿಂದ ಶಿಕ್ಷಣವೇ ಪ್ರತಿಯೊಬ್ಬರಿಗೂ ಮೂಲಧಾರ ಎಂದು ಹೇಳಿದರು.
ಪ್ರಭಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಅಂಬೇಡ್ಕರ್ ಅವರ ಆಶಯದಂತೆ ಎಲ್ಲಾರಿಗೂ ಸಮಾನ ಶಿಕ್ಷಣ, ಮತ್ತು ಬದುಕಲು ಸಮಾನ ಅವಕಾಶಗಳು ಒದಗಬೇಕಿದೆ ಎಂದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ನಗರಸಭೆ ಪೌರಾ ಯುಕ್ತೆ ಬಿ. ಶುಭಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾ ದೇವಿ ಗಲಗಲಿ , ಬಿ.ಸಿ.ಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಹಾಜರಿದ್ದರು.
ಸಂವಿಧಾನ ಶಿಲ್ಪಿ
ಕುಶಾಲನಗರ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ ಅವರು ಇಡೀ ದೇಶದ ಎಲ್ಲ ಸಮುದಾಯಗಳ ನಾಯಕರು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ.ಚರಣ್ ಹೇಳಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುರ್ಷ್ಪಾಚನೆ ಮಾಡಿ ಮಾತನಾಡಿದರು.
ದೇಶದ ಸಮಾನತೆಗಾಗಿ ಸಂವಿಧಾನ ರಚಿಸಿ ಪ್ರತಿಯೊಬ್ಬರಿಗೂ ಹಕ್ಕುಗಳನ್ನು ನೀಡುವ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.ಪ.ಪಂ.ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್ ,ಸದಸ್ಯರಾದ ಎಚ್.ಡಿ.ಚಂದ್ರು, ನಂಜುಂಡಸ್ವಾಮಿ ಮಾತನಾಡಿ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಕುರಿತು ವಿವರಿಸಿದರು.
ಈ ಸಂದರ್ಭ ಸ್ಥಾಯಿ ಸಮಿತಿ ಅಧ್ಯಕ್ಷೆ ಸುರೇಯಾಬಾನು, ಸದಸ್ಯರಾದ ಎಚ್.ಜೆ.ಕರಿಯಪ್ಪ, ಡಿ.ಕೆ.ತಿಮ್ಮಪ್ಪ, ಎಚ್.ಕೆ.ಪಾರ್ವತಿ, ರೇಣುಕಾ, ರಶ್ಮಿಅಮೃತ್ ರಾಜ್, ಕವಿತಾ, ಫಜಲುಲ್ಲಾ ಖಾನ್, ಮುಖ್ಯಾಧಿಕಾರಿ ಶ್ರೀಧರ್, ಕಂದಾಯ ಅಧಿಕಾರಿ ಸತೀಶ್, ಆರೋಗ್ಯಾಧಿಕಾರಿ ಲಿಂಗರಾಜು ಹಾಗೂ ಸಿಬ್ಬಂದಿ ಹಾಜರಿದ್ದರು. ಇದೇ ಸಂದರ್ಭ ಪೌರಕಾರ್ಮಿಕರಾದ ಗಣೇಶ್, ಗೌರಮ್ಮ ಅವರನ್ನು ಸನ್ಮಾನಿಸಲಾಯಿತು.ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಹಾಗೂ ನಗರಸಭೆಯಿಂದ ಮನೆ ದುರಸ್ತಿಗಾಗಿ ಅರ್ಹರಿಗೆ ಚೆಕ್ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.