ಕೋಲಾರ: ‘ನೀರಿನ ಸಮಸ್ಯೆ ಇರುವ ಗ್ರಾಮದಲ್ಲಿ ಕೊಳವೆ ಬಾವಿ ಕೊರೆಯಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹರ್ಷಗುಪ್ತ ಸೂಚಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನೀರಿನ ಸಮಸ್ಯೆಯಿಲ್ಲದ ಗ್ರಾಮದಲ್ಲಿ ಅನವಶ್ಯಕವಾಗಿ ಕೊಳವೆಬಾವಿ ಕೊರೆಯಿಸಬೇಡಿ. ನೀರು ಲಭ್ಯತೆಯ ಬಗ್ಗೆ ಪ್ರತಿ ವಾರಕ್ಕೊಮ್ಮೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.
‘ಕೊಳವೆಬಾವಿಗಳನ್ನು ಕೊರೆಯಿಸಿದ ಕೂಡಲೇ ಅದಕ್ಕೆ ಅಗತ್ಯವಿರುವ ಪಂಪು, ಮೋಟರ್ ಸಲಕರಣೆಗಳ ಜತೆಗೆ ವಿದ್ಯುತ್ ಸಂಪರ್ಕ ನೀಡಬೇಕು. ಬಂಗಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಸಮಸ್ಯಾತ್ಮಕ ಗ್ರಾಮಗಳು ಇರುವುದರಿಂದ ಹೆಚ್ಚಿನ ಗಮನಹರಿಸಬೇಕು’ ಎಂದು ತಹಶೀಲ್ದಾರ್ ಅವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಮಾತನಾಡಿ, ‘ಬಂಗಾರಪೇಟೆ 45, ಕೋಲಾರ 23, ಮುಳಬಾಗಿಲು 6, ಶ್ರೀನಿವಾಸಪುರ 2 ಹಾಗೂ ಮಾಲೂರು ತಾಲ್ಲೂಕಿನಲ್ಲಿ 2 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
‘ವಾರದಲ್ಲಿ ಸಮಸ್ಯಾತ್ಮಕ ಗ್ರಾಮಗಳ ಸಂಖ್ಯೆ ಕಡಿಮೆ ಮಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಂಗಾರಪೇಟೆ ಮತ್ತು ಕೋಲಾರ ತಾಲ್ಲೂಕಿನಲ್ಲಿ ಸಮಸ್ಯೆ ಗ್ರಾಮಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿಶೇಷ ಕಾಳಜಿವಹಿಸುವಂತೆ ತಹಶೀಲ್ದಾರ್ಗಳಿಗೆ ಸೂಚಿಸಲಾಗಿದೆ’ ಎಂದರು.
ಮೇವು ಲಭ್ಯತೆ: ‘ರೈತರು ಜಿಲ್ಲೆಯಲ್ಲಿ ಸ್ವಯಂಪ್ರೇರಿತರಾಗಿ 6,528 ಎಕರೆಗಳಲ್ಲಿ ಮೇವು ಬೆಳೆದಿದ್ದಾರೆ. ಅಲ್ಲದೇ ಎಂಪಿಸಿಎಸ್ಗಳೊಂದಿಗೆ ಕರಾರು ಮೂಲಕ 6,528 ಎಕರೆ ಖಾಸಗಿ ಜಮೀನಿನಲ್ಲಿ ಹಸಿರು ಮೇವು ಬೆಳೆಯಲಾಗಿದೆ’ ಎಂದು ಅವರು ತಿಳಿಸಿದರು.
ಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಚನ್ನಕೇಶವಯ್ಯ ಮಾತನಾಡಿ, ‘ಇಲಾಖೆಯ ಜತೆಗೆ ಕೋಚಿಮುಲ್, ಕಂದಾಯ ಇಲಾಖೆ, ಪಂಚಾಯತ್ರಾಜ್ ಇಲಾಖೆಯ ಸಹಯೋಗದಲ್ಲಿ ಮೇವು ಬೆಳೆಯಲಾಗುತ್ತಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ’ ಎಂದು ತಿಳಿಸಿದರು.
ಕೆರೆಗಳ ಸಚ್ಛತೆಗೆ ಮುಂದಾಗಿ: ‘ನರೇಗಾ ಯೋಜನೆಯಡಿಯಲ್ಲಿ ಕೆರೆಗಳ ಸ್ವಚ್ಛತೆಗೆ ಮುಂದಾಗಬೇಕು. ಶ್ರೀನಿವಾಸಪುರ ಹಾಗೂ ಮಾಲೂರಿನ ತಮ್ಮ ವ್ಯಾಪ್ತಿಯಲ್ಲಿನ ಸರ್ವೆ ಅಧಿಕಾರಿಗಳು ಸಹಕಾರ ನೀಡದೆ ಇರುವ ಬಗ್ಗೆ ಮಾಹಿತಿ ಬಂದಿದೆ. ಬೇರೆ ಕೆಲಸಗಳನ್ನು ಬದಿಗಿಟ್ಟು ಆಗುವ ಕೆಲಸಗಳ ಕಡೆ ಗಮನ ಹರಿಸಬೇಕು’ ಎಂದು ಹರ್ಷಗುಪ್ತ ಅಧಿಕಾರಿಗಳಿಗೆ ಸೂಚಿಸಿದರು.
‘ರೈತರು ಆತ್ಮಹತ್ಯೆ ಮಾಡಿಕೊಂಡಿರುವಂತಹ 31 ಪ್ರಕರಣಗಳ ಪೈಕಿ 17 ಮಂದಿ ಕುಟುಂಬಗಳಿಗೆ ಪರಿಹಾರ ಮತ್ತು ಆರೋಗ್ಯ ಸೌಕರ್ಯ ಕಲ್ಪಿಸಲಾಗಿದೆ. 10 ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಉಳಿದ 7 ಕುಟುಂಬಕ್ಕೆ ₹ 2.5 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೇ ಸುವರ್ಣ ಆರೋಗ್ಯ ಟ್ರಸ್ಟ್ ವತಿಯಿಂದ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಮಂಜುನಾಥ್ ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.