ಮಂಡ್ಯ: ಇಲ್ಲಿನ ಕಾವೇರಿ ನೀರಾವರಿ ನಿಗಮದ ಇಬ್ಬರು ಮಹಿಳಾ ಅಧಿಕಾರಿಗಳು ಶನಿವಾರ ಲಂಚ ತೆಗೆದುಕೊಳ್ಳುತ್ತಿದ್ದಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದರು.ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜ್ಯೋತಿ ಹಾಗೂ ಸಹಾಯಕ ಎಂಜಿನಿಯರ್ ಶೋಭಾ ಸಿಕ್ಕಿಬಿದ್ದವರು.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸಾವಂದಿಪುರ ಗ್ರಾಮದ ಗುತ್ತಿಗೆದಾರ ಕೃಷ್ಣಪ್ಪ ಎಂಬುವವರಿಗೆ ₹ 12,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
ಕೃಷ್ಣಪ್ಪ ಅವರು ದಲಿತರ ಕಾಲೊನಿಯ ಚರಂಡಿ ಹಾಗೂ ರಸ್ತೆ ಕಾಮಗಾರಿ ಪೂರ್ಣಗೊಂಡ ಬಗ್ಗೆ ವರದಿ ಕೇಳಿದ್ದರು. ₹ 12,000 ಲಂಚ ಕೊಡುವಂತೆ ಅಧಿಕಾರಿಗಳು ಹೇಳಿದ್ದರು. ಮುಂಗಡವಾಗಿ ₹ 10,000 ಲಂಚ ಪಡೆಯುವಾಗಲೇ ಎಸಿಬಿ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.
ಎಸಿಬಿ ಡಿವೈಎಸ್ಪಿ ಶೈಲೇಂದ್ರ, ಸಿಪಿಐ ವೆಂಕಟೇಗೌಡ, ಎಸ್ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆಯಿತು. ತಂಡವು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. ಕಚೇರಿಯ ಕಡತಗಳನ್ನು ಪರಿಶೀಲನೆ ಮಾಡಿತು.