ಸಾಗರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಗಣಪತಿ ದೇವಸ್ಥಾನದ ಆವರಣದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿ ಎದುರು ಬಹಿರಂಗ ಸಭೆ ನಡೆಸಿದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಗೂರಲಕೆರೆ ಮಾತನಾಡಿ, ‘ಬರದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್ಗಳಲ್ಲಿರುವ ರೈತರ ಸಾಲವನ್ನು ಕೂಡಲೇ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.
‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿವೆ. ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಬದಲು ಎರಡೂ ಸರ್ಕಾರ ಗಳು ಜವಾಬ್ದಾರಿ ಅರಿತು ಕೆಲಸ ಮಾಡ ಬೇಕು’ ಎಂದು ಅಭಿಪ್ರಾಯಪಟ್ಟರು.
‘ಬರದಿಂದ ತತ್ತರಿಸುತ್ತಿರುವ ರೈತ ಸಮುದಾಯ ವಿಪರೀತ ಪ್ರಮಾಣದ ಬೆಳೆ ನಷ್ಟ ಅನುಭವಿಸಿ ಆತಂಕದಲ್ಲಿದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಸರ್ಕಾರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪುಡಿಗಾಸಿನ ಪರಿಹಾರ ನೀಡುವುದನ್ನು ನಿಲ್ಲಿಸಬೇಕು. ಹೆಕ್ಟೇರ್ಗೆ ಕನಿಷ್ಠ ₹ 20 ಸಾವಿರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಶಾಖೆಯ ಕಾರ್ಯಾಧ್ಯಕ್ಷ ಎಚ್.ಡಿ.ಕನ್ನಪ್ಪ ಸುಂಕದೇವರಕೊಪ್ಪ, ಗೌರವಾಧ್ಯಕ್ಷ ಜಾಬ್ಳಿ ಮಂಜಪ್ಪ ಮರತ್ತೂರು, ಪ್ರಧಾನ ಕಾರ್ಯದರ್ಶಿ ರಾಮಪ್ಪ ಮರತ್ತೂರು, ನಾರಾಯಣ, ಅಣ್ಣಪ್ಪ, ಲಲಿತಾ ಕೆ.ಎಚ್, ಅನುಸೂಯ, ರತ್ನಾ, ಲಕ್ಷ್ಮಮ್ಮ, ಸವಿತಾ, ಯಶೋದಾ, ಚೌಡಮ್ಮ, ಗಂಗಮ್ಮ, ಕೃಷ್ಣಮೂರ್ತಿ, ಎಂ.ಮಂಜಪ್ಪ ಇದ್ದರು.