ಚಿತ್ರದುರ್ಗ: ‘ಸವಿತಾ ಸಮುದಾಯ ಶೋಷಣೆಯಿಂದ ಮುಕ್ತವಾಗಲು ಸಂಘಟಿತ ಹೋರಾಟ ಅತ್ಯಗತ್ಯ’ ಎಂದು ಸವಿತಾ ಸಮುದಾಯದ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ.ರಾಜಣ್ಣ ಹೇಳಿದರು.
ಪತ್ರಿಕಾ ಭವನದಲ್ಲಿ ಭಾನುವಾರ ಸವಿತಾ ಸಮುದಾಯದಿಂದ ಹಮ್ಮಿಕೊಂಡಿದ್ದ ಸವಿತಾ ನೌಕರರ ತಾಲ್ಲೂಕು ಶಾಖೆ ಉದ್ಘಾಟಿಸಿ ಮಾತನಾಡಿದರು. ‘ಸಮಾಜದಲ್ಲಿ ಬಡತನದಿಂದ ಜೀವನ ಸಾಗಿಸುತ್ತಿರುವ ಸವಿತಾ ಸಮುದಾಯದವರು ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದಿದ್ದಾರೆ.
ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಮುದಾಯ ಶೋಚನೀಯ ಸ್ಥಿತಿಯಲ್ಲಿದೆ. ಇಂಥ ಸಮುದಾಯ ಅಭಿವೃದ್ಧಿ ಹೊಂದಲು ಮೊದಲು ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು.
ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಿದ ನಂತರ ಸಂಘಟನೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಈ ಮೂಲಕ ಸವಿತಾ ಸಮುದಾಯವನ್ನು ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.
‘ಸಂಘದ ರಾಜ್ಯ ಶಾಖೆಯಿಂದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆ ರೂಪಿಸಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ವಸತಿ ಸೌಕರ್ಯ, ಆರ್ಥಿಕ ಸಹಾಯ, ಕೌಶಲ ತರಬೇತಿ ಸೇರಿದಂತೆ ಐಎಎಸ್, ಐಪಿಎಸ್ ಪರೀಕ್ಷೆ ಉತ್ತೀರ್ಣರಾಗಲು ಪೂರಕ ತರಬೇತಿ ಹಮ್ಮಿಕೊಳ್ಳಲಾಗಿದೆ. ಸಮುದಾಯ
ದವರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಕೋರಿದರು.
ಸವಿತಾ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಚಂದ್ರಶೇಖರ್ ಮಾತನಾಡಿ, ‘ಜಿಲ್ಲೆಯಲ್ಲಿ ಸವಿತಾ ಸಮುದಾಯದ ಶಾಖೆಗಳನ್ನು ಗ್ರಾಮಾಂತರ ಭಾಗಗಳಿಗೂ ವಿಸ್ತರಿಸಲಾಗುವುದು. ಈ ಮೂಲಕ ಸಮುದಾಯದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಲಾಗುವುದು.
ಸರ್ಕಾರದ ನೆರವಿನಿಂದ ನಗರದಲ್ಲಿ ಸುಸಜ್ಜಿತ ಸವಿತಾ ಭವನ ಮತ್ತು ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಸನ್ಮಾನ ಸ್ವೀಕರಿಸಿದ ಅಫ್ಜಲ್ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ರೇಖಾ ನರಸಿಂಹ ಮಾತನಾಡಿ, ‘ಸಮುದಾಯದವರು ಮೊದಲು ಕೀಳರಿಮೆ ಬಿಡಬೇಕು. ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಸಮುದಾಯದ ಅಭಿವೃದ್ಧಿಗೂ ಮುಂದಾಗಬೇಕು’ ಎಂದು ಸಲಹೆ ನೀಡಿದರು.
ಶಾಂತಮ್ಮ, ಪತ್ರಕರ್ತ ಟಿ.ತಿಪ್ಪೇಸ್ವಾಮಿ ಸಂಪಿಗೆ, ರಾಜ್ಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಪತಿ, ಉಪಾಧ್ಯಕ್ಷ ಕೇಶವ
ಮೂರ್ತಿ, ಖಜಾಂಚಿ ಲೋಕೇಶ್, ಯೋಧ ನರಸಿಂಹ, ಉಪನ್ಯಾಸಕ ಬಸವರಾಜಪ್ಪ, ಶಿಕ್ಷಕ ಶ್ರೀನಿವಾಸಮೂರ್ತಿ, ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಎ.ಲಕ್ಷ್ಮಿನಾರಾಯಣಪ್ಪ, ಎನ್.ಡಿ.ಕುಮಾರ್, ವೇಣುಗೋಪಾಲ್, ತಾಲ್ಲೂಕು ಸಮಿತಿ ಅಧ್ಯಕ್ಷ ಆರ್.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಆರ್.ನಾಗರಾಜ್ ಇದ್ದರು.
ನಿವೃತ್ತ ನೌಕರರಿಗೆ, ಪ್ರತಿಭಾವಂತರನ್ನು ಸನ್ಮಾನಿಸಲಾಯಿತು. ಎಸ್.ಕಾವ್ಯಾ ಭರತನಾಟ್ಯ ಪ್ರದರ್ಶಿಸಿದರು. ಬಿಂದುಶ್ರೀ ಸತೀಶ್ ಪ್ರಾರ್ಥಿಸಿದರು. ಟಿ.ಕಾಂತರಾಜ್ ಸ್ವಾಗತಿಸಿದರು. ಎಸ್.ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ವಂದಿಸಿದರು.