ಡೆಹ್ರಾಡೂನ್: ಮುಸ್ಲಿಮರ ತ್ರಿವಳಿ ತಲಾಖ್ ಪದ್ಧತಿಯಿಂದ ನೊಂದ ಮುಸ್ಲಿಂ ಮಹಿಳೆಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರವಾಗುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.
ತ್ರಿವಳಿ ತಲಾಖ್ ಪದ್ಧತಿಯಿಂದ ಬೇಸತ್ತ ಉತ್ತರಾಖಂಡದ ಮುಸ್ಲಿಂ ಮಹಿಳೆಯೊಬ್ಬರು ಈ ರೀತಿ ಹೇಳಿದ್ದಾರೆ.
ಅಲ್ಲದೇ ಈ ಪದ್ಧತಿಯಿಂದ ಎಲ್ಲಾ ಮುಸ್ಲಿಂ ಮಹಿಳೆಯರಿಗೆ ಬಿಡುಗಡೆ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮನವಿ ಮಾಡಿದ್ದಾರೆ.
ಹಿಂದೂ ಧರ್ಮಕ್ಕೆ ಮತಾಂತರವಾದರೆ ಪುರುಷರು ಮೂರು ಬಾರಿ ತಲಾಖ್ ಎಂದು ಉಚ್ಛರಿಸಿ ವಿಚ್ಛೇದನ ನೀಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಹಿಂದೂ ಧರ್ಮ ಸ್ವೀಕರಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.
ಕಳೆದ ಭಾನುವಾರ ಭುವನೇಶ್ವರದಲ್ಲಿ ಮುಕ್ತಾಯಗೊಂಡ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ‘ತ್ರಿವಳಿ ತಲಾಖ್’ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರ ಮೇಲಾಗುತ್ತಿರುವ ಶೋಷಣೆ ನಿಲ್ಲಬೇಕು ಮತ್ತು ಅವರಿಗೆ ನ್ಯಾಯ ದೊರೆಯಬೇಕು’ ಎಂದು ಹೇಳಿದ್ದರು.
ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇದನ್ನು ಮಹಾಭಾರತದ ದ್ರೌಪದಿ ವಸ್ತ್ರಾಪಹರಣಕ್ಕೆ ಹೋಲಿಸಿದ್ದರು. ಅಲ್ಲದೇ ಈ ವಿಚಾರದಲ್ಲಿ ರಾಜಕೀಯ ಮುಖಂಡರು ಮೌನವಹಿಸಿರುವುದು ಏಕೆ ಎಂದು ಪ್ರಶ್ನಿಸಿದ್ದರು.
ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಾಮ್ ಖಾನ್ ಅವರು, ತ್ರಿವಳಿ ತಲಾಖ್ ಅನ್ನು ನಿಷೇಧಿಸುವುದಕ್ಕಿಂತ ಮೊದಲು ಹಿಂದೂ ಧರ್ಮದ ಸತಿ ಪದ್ಧತಿಯನ್ನು ಮೊದಲು ನಿಷೇಧಿಸಿ ಎಂದು ಹೇಳಿದ್ದಾರೆ.