ಉಡುಪಿ: ‘ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕದ ಬಗ್ಗೆ ಇರುವ ಗೊಂದಲ ಬಗೆಹರಿಸಲು ಮುಂದಾಗದ ಯಡಿಯೂರಪ್ಪ ತಾತ್ಸಾರ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಶಿವಮೊಗ್ಗದ ಮಾರಿಕಾಂಬಾ ಮೈಕ್ರೊ ಫೈನಾನ್ಸ್ ಸಂಸ್ಥೆಯ ಸ್ವ– ಸಹಾಯ ಸಂಘಗಳ ಸದಸ್ಯರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭಾನುವಾರ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
‘ನಾಲ್ಕು ಜನರ ಸಮಿತಿ ರಚಿಸಿ ಫೆ.10ರ ಒಳಗೆ ಸಮಸ್ಯೆ ಬಗೆಹರಿಸಿ ಎಂದು ಪಕ್ಷದ ಅಧ್ಯಕ್ಷ ಅಮಿತ್ ಷಾ ಸೂಚನೆ ನೀಡಿದ್ದರು. ಆದರೆ ಈವರೆಗೆ ಸಮಿತಿ ಸಭೆಯನ್ನೇ ಕರೆಯದ ಕಾರಣ ಗೊಂದಲ ಮುಂದುವರಿದಿದೆ. ಇದರಿಂದ ಬೇಸರಗೊಂಡಿರುವ, ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿರುವ 24 ಮಂದಿ ನಿಷ್ಠಾವಂತ ಕಾರ್ಯಕರ್ತರು ಷಾ ಅವರಿಗೆ ಪತ್ರ ಸಹ ಬರೆದಿದ್ದರು. ಈಗ ‘ಸಂಘಟನೆ ಉಳಿಸಿ’ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಇದೇ 27ರಂದು ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ಸೊಗಡು ಶಿವಣ್ಣ ಅವರ ಮನೆಯಲ್ಲಿ ಕರೆದಿದ್ದ ಸಭೆಯಲ್ಲಿ ನಾನೂ ಭಾಗವಹಿಸಿದ್ದೆ’ ಎಂದರು.
‘ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪಕ್ಷದ ಎಲ್ಲ ಮುಖಂಡರೂ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆದರೆ, ಸೋಲಾಗಿದ್ದು, ಅದರ ಹೊಣೆಯನ್ನು ಯಾರೋ ಒಬ್ಬರ ಮೇಲೆ ಹೊರಿಸುವುದಿಲ್ಲ. ಸೋಲಿನ ಬಗ್ಗೆ ಪರಾಮರ್ಶೆ ಮಾಡಲಾಗುವುದು’ ಎಂದರು.
* ಬ್ರಿಗೇಡ್ ಚಟುವಟಿಕೆ ಮುಂದುವರಿಸಿ ಮತ್ತು ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವ ವಹಿಸಿ ಎಂದು ಅಮಿತ್ ಷಾ ಸ್ಪಷ್ಟವಾಗಿ ಹೇಳಿದ್ದಾರೆ – ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ