ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ: ದಕ್ಷಿಣ ಕನ್ನಡಕ್ಕೆ ಸಮಸ್ಯೆ ಇಲ್ಲ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಭಿಮತ
Last Updated 23 ಏಪ್ರಿಲ್ 2017, 20:26 IST
ಅಕ್ಷರ ಗಾತ್ರ

ಶಿರಾ: ‘ದಕ್ಷಿಣ ಕನ್ನಡ ಜಿಲ್ಲೆಯವನಾದ ನಾನು ಮುಖ್ಯಮಂತ್ರಿಯಾಗಿದ್ದಾಗ ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಮುಖ್ಯಮಂತ್ರಿಯಾಗದೇ ರಾಜ್ಯದ 30 ಜಿಲ್ಲೆಗಳ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಕರಾವಳಿ ಪ್ರದೇಶದವರ ವಿರೋಧದ ನಡುವೆಯೂ ಎತ್ತಿನಹೊಳೆ ಯೋಜನೆಯ ಅನುಷ್ಠಾನಕ್ಕೆ ಮುಂದಾದೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಭಾನುವಾರ ನಡೆದ  ನಂಜಾವಧೂತ ಸ್ವಾಮೀಜಿಯವರ 38 ನೇ ವರ್ಧಂತಿ ಮಹೋತ್ಸವ ಮತ್ತು ನೀರಾವರಿ ಹಕ್ಕೊತ್ತಾಯ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನೇತ್ರಾವತಿ ನದಿಯ ಮೂಲಕ 1200 ಟಿಎಂಸಿ ಅಡಿ ನೀರು ಸಮುದ್ರಕ್ಕೆ ಹರಿದುಹೋಗುತ್ತಿದೆ. ಅದರಲ್ಲಿ 24 ಟಿಎಂಸಿ ಅಡಿ ನೀರನ್ನು ಎತ್ತಿನಹೊಳೆ ಯೋಜನೆಯ ಮೂಲಕ ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ  ಕೊಡುವುದರಿಂದ  ಪರಿಸರಕ್ಕಾಗಲಿ, ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ’ ಎಂದು ಅವರು ಹೇಳಿದರು.

‘ರಾಜ್ಯದಲ್ಲಿ ನಮ್ಮ  ಸರ್ಕಾರ ಅಧಿಕಾರಕ್ಕೆ ಬಂದರೆ ಯೋಜನೆಯ ಅನುಷ್ಠಾನಕ್ಕೆ ಪ್ರಥಮ ಅಧ್ಯತೆ ನೀಡುತ್ತೇವೆ’ ಎಂದರು.

‘ರಾಜಕಾರಣಿಗಳು ಪ್ರಚಾರಕ್ಕಾಗಿ ಕೆಲಸ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಧ್ಯ ಕರ್ನಾಟಕ ಭಾಗಕ್ಕೆ ನೀರು ಹರಿಯುವುದರಲ್ಲಿ ಯಾವುದೇ ಅನುಮಾನ ಇಲ್ಲ’ ಎಂದು ಹೇಳಿದರು.

‘ನಮ್ಮಲ್ಲಿ ಜಲಸಂಪನ್ಮೂಲದ ಕೊರತೆ ಇಲ್ಲ. ರಾಜ್ಯದಲ್ಲಿ 3,554 ಟಿಎಂಸಿ ಅಡಿ ನೀರಿದ್ದು, ಅದರಲ್ಲಿ ಕೇವಲ 1300 ಟಿಎಂಸಿ ಅಡಿ ನೀರನ್ನು ಮಾತ್ರ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಉಳಿದ 2254 ಟಿಎಂಸಿ ಅಡಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡರೆ ರಾಜ್ಯದಲ್ಲಿ ನೀರಿನ ಸಮಸ್ಯೆ ಬಗೆಹರಿಯುವುದು’ ಎಂದು ಅವರು ಹೇಳಿದರು.

ಪಟ್ಟನಾಯಕನಹಳ್ಳಿ ಮಠದಿಂದ ನೀಡುವ ‘ಶ್ರೀ ಅವಧೂತ ಪ್ರಜ್ಞಾ’ ಪ್ರಶಸ್ತಿಯನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಗೆ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT