ನವದೆಹಲಿ: ಸರ್ಕಾರದ ವಿವಿಧ ಹುದ್ದೆಗಳ ಬಡ್ತಿಗೆ ಮೀಸಲಾತಿ ಪದ್ಧತಿ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆಯನ್ನು ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯದ 400ಕ್ಕೂ ಅಧಿಕ ಅಧಿಕಾರಿಗಳು ಸೋಮವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕೋಪಯೋಗಿ ಮತ್ತು ನೀರಾವರಿ ಇಲಾಖೆಯ 11 ಜನ ಅಧಿಕಾರಿಗಳು ಕಳೆದ ಮಾರ್ಚ್ 31ರಂದು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಹಿಂಬಡ್ತಿ ಪಡೆಯುವ ಆತಂಕದಲ್ಲಿರುವ ಆರೋಗ್ಯ, ಶಿಕ್ಷಣ, ಕೃಷಿ, ಕಂದಾಯ ಇಲಾಖೆಗಳ ಅಧಿಕಾರಿಗಳೂ ಇದೀಗ ಅರ್ಜಿ ಸಲ್ಲಿಸಿದವರಲ್ಲಿ ಸೇರಿದ್ದಾರೆ.
ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟರಿಗೆ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಇಲಾಖೆಗಳಲ್ಲಿ ಅವಕಾಶ ನೀಡಬೇಕು ಎಂದು ಸಂವಿಧಾನದ 16 (4) ವಿಧಿಯು ಹೇಳುತ್ತದೆ ಎಂದು ಪ್ರತಿಪಾದಿಸಿರುವ ಅರ್ಜಿದಾರರು, 1950ರಿಂದಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿ ಪರಿಶಿಷ್ಟ ಜಾತಿಯ ನೌಕರರಿಗೆ ಶೇ 15 ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಶೇ 3ರಷ್ಟು ಮೀಸಲಾತಿ ಕಲ್ಪಿಸಿವೆ. ದೇಶಕ್ಕೆ ಸ್ವಾತಂತ್ರ್ಯ ಬಂದು 69 ವರ್ಷಗಳೇ ಕಳೆದಿದ್ದರೂ ಕನಿಷ್ಠ ಪ್ರಮಾಣದ ಮೀಸಲಾತಿಯನ್ನೂ ಸಾಧಿಸಲಾಗಿಲ್ಲ ಎಂದು ತಿಳಿಸಲಾಗಿದೆ.
ಬಡ್ತಿಯಲ್ಲಿ ಮೀಸಲಾತಿ ವಿಧಾನ ಅನುಸರಿಸುತ್ತಿರುವುದನ್ನು ವಿರೋಧಿಸಿ ಬಿ.ಕೆ. ಪವಿತ್ರಾ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಕಳೆದ ಫೆಬ್ರುವರಿ 9ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರವೂ ವಾರದೊಳಗೆ ಅರ್ಜಿ ಸಲ್ಲಿಸಲಿದ್ದು, ಈ ನಿಟ್ಟಿನಲ್ಲಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರ ಸಲಹೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.