ಬ್ಯಾಡಗಿ: 2015–16ನೇ ಸಾಲಿನ ಬಾಕಿ ಉಳಿದಿರುವ ಬೆಳೆ ವಿಮೆ ಪರಿಹಾರದ ಹಣ ಸಂದಾಯ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ನಷ್ಟ ಪರಿಹಾರದ ಮೊತ್ತ ಗುಂಟೆಗೆ ₹68ಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ತಹಶೀಲ್ದಾರ್ ಶಿವಶಂಕರ ನಾಯಕ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡ ಗಂಗಣ್ಣ ಎಲಿ, ‘ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಇಲ್ಲದಿದ್ದರೇ ಇದೇ 27 ರಂದು ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಸಿದರು.‘ಕಳೆದ 3 ವರ್ಷಗಳಿಂದ ಸಮರ್ಪಕ ಮಳೆ ಬೀಳದೆ ಬೆಳೆ ನಷ್ಟ ಹೊಂದಿರುವ ರೈತರು ಪರಿಹಾರದ ಹಣ ಬಾರದೆ ಮತ್ತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಾಲ್ಲೂಕಿಗೆ ₹18 ಕೋಟಿ ಬೆಳೆ ನಷ್ಟ ಪರಿಹಾರ ಹಣ ಬಿಡುಗಡೆಯಾಗಿದ್ದರೂ ಅದರಲ್ಲಿ ₹3 ಕೋಟಿಗೂ ಹೆಚ್ಚು ಹಣ ರೈತರ ಖಾತೆಗಳಿಗೆ ಇನ್ನೂ ಜಮೆ ಆಗಿಲ್ಲ. ಕೂಡಲೇ ಜಮೆ ಮಾಡಬೇಕು’ ಎಂದು ಆಗ್ರಹಿಸಿದರು.
‘ಬ್ಯಾಡಗಿ ತಾಲ್ಲೂಕನ್ನು ಬರಗಾಲ ಪೀಡಿತ ಎಂದು ಘೋಷಿಸಿದ್ದರೂ ಬರ ಪರಿಹಾರ ಕಾಮಗಾರಿ ನಡೆಯುತ್ತಿಲ್ಲ. ಕೆರೆ–ಕಟ್ಟೆಗಳು ಖಾಲಿಯಾಗಿದ್ದು, ಹೂಳು ತೆಗೆಯುವ ಕಾರ್ಯ ನಡೆಯುತ್ತಿಲ್ಲ. ಕಾರಣ ಪ್ರತಿಯೊಂದು ಗ್ರಾಮದಲ್ಲಿರುವ ಕೆರೆ ಹೂಳು ತೆಗೆಯುವ ಕಾರ್ಯ ಆರಂಭವಾಗಬೇಕು’ ಎಂದು ಒತ್ತಾಯಿಸಿದರು.
ರೈತ ಮುಖಂಡ ಕಿರಣಕುಮಾರ ಗಡಿಗೋಳ ಮಾತನಾಡಿ,‘ಕೇಂದ್ರ ಸರ್ಕಾರ ಬೆಳೆ ನಷ್ಟ ಪರಿಹಾರದ ಹಣ ಗುಂಟೆಗೆ ₹68 ನಿಗದಿಪಡಿಸಿದ್ದರೂ, ರಾಜ್ಯ ಸರ್ಕಾರ ₹54.40ನಂತೆ ನೀಡು ತ್ತಿದೆ. ನಮ್ಮ ಹೊಲ ನಮ್ಮ ದಾರಿ ಯೋಜನೆ, ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ ಇನ್ನೂ ಅನು ಷ್ಠಾನಗೊಂಡಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿದ್ದು, ಕೇವಲ 4 ಗಂಟೆ ಮಾತ್ರ ತ್ರೀಫೇಸ್ ವಿದ್ಯುತ್ ದೊರೆಯುತ್ತಿದೆ
ಇದರಿಂದ ಜನ ಜಾನುವಾರುಗಳು ಕುಡಿಯುವ ನೀರಿಗೆ ತಾತ್ವಾರ ಉಂಟಾಗಿದೆ. ಕೂಡಲೆ ವಿದ್ಯುತ್ ಸರಬರಾಜು ಅವಧಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು. ಈ ವೇಳೆ, ರೈತ ಮುಖಂಡರಾದ ಬಸವರಾಜ ಸಂಕಣ್ಣನವರ, ಶಂಭಣ್ಣ ಬಿದರಿ, ನಗರ ಘಟಕದ ಅಧ್ಯಕ್ಷ ಚಿಕ್ಕ್ಪ ಛತ್ರದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.