ಬೆಂಗಳೂರು: ನಗರದಲ್ಲಿ ಈ ವರ್ಷ ಒಂದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಸತಿ ಸಮಿತಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ರಾಜ್ಯದಲ್ಲಿ ಈ ವರ್ಷ ಒಟ್ಟು ನಾಲ್ಕು ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದರು.
ನಾಲ್ಕು ವರ್ಷಗಳಲ್ಲಿ ಒಟ್ಟು 11 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಮನೆ ನಿರ್ಮಾಣದ ಕಾರ್ಯ ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದರು.
‘ಕೇಂದ್ರ ಸರ್ಕಾರ ಜಾರಿ ಮಾಡಿರುವ ರಿಯಲ್ ಎಸ್ಟೇಟ್ ಕಾಯಿದೆ ಸ್ವಾಗತಾರ್ಹ ಖರೀದಿದಾರರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕಾನೂನು ರಚಿಸಲಾಗಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ಸಣ್ಣ– ಪುಟ್ಟ ತಿದ್ದುಪಡಿ ಮಾಡಿ ನಿಯಮಾವಳಿ ರಚಿಸುತ್ತೇವೆ ’ಎಂದು ಕೃಷ್ಣಪ್ಪ ತಿಳಿಸಿದರು.