ತ್ರಾಸಿ (ಬೈಂದೂರು): ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಸು ತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯ ಬೇಕು. ಬಿಜೆಪಿಯನ್ನು ಅಧಿಕಾರಕ್ಕೇರಿಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾ ಗಿಸಬೇಕು. ಅಲ್ಲಿಯ ತನಕ ಕಾರ್ಯ ಕರ್ತರು ವಿರಮಿಸಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ತ್ರಾಸಿಯಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ತನ್ನ ಕಾರ್ಯಕ್ರಮ ಎಂದು ಬಿಂಬಿಸುವ ಮೂಲಕ ಸ್ವಲ್ಪ ಮಟ್ಟಿಗೆ ಉಸಿರಾಡುತ್ತಿದೆ. ಆದರೆ, ಕೇಂದ್ರ ಸರ್ಕಾರ ₹ 32ಕ್ಕೆ ಕೆಜಿ ಅಕ್ಕಿ, ಗೋಧಿ ಖರೀದಿಸಿ, ರಾಜ್ಯಕ್ಕೆ ₹ 3 ಮತ್ತು ₹ 2ರ ದರದಲ್ಲಿ ಒದಗಿಸುತ್ತಿದೆ. ಇದು ಕೇಂದ್ರದ ಯೋಜನೆಯೇ ಹೊರತು ರಾಜ್ಯದ್ದಲ್ಲ. ಇಂತಹ ಸುಳ್ಳು ಪ್ರಚಾರವನ್ನು ಕಾರ್ಯಕರ್ತರು ಬಯಲು ಗೊಳಿಸಬೇಕು ಎಂದರು.
ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಶಾಸಕ ವಿ.ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿ ವಾಸ ಪೂಜಾರಿ, ಮಾಜಿ ಶಾಸಕರಾದ ಕೆ.ಲಕ್ಷ್ಮೀನಾರಾಯಣ, ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕಾರ್ಯಕಾರಿಣಿ ಸದಸ್ಯರು, ಸ್ಥಳೀಯ ಸಂಸ್ಥೆಗಳ ಸದಸ್ಯರು ಇದ್ದರು.
ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ವಂದಿಸಿದರು. ಕ್ಷೇತ್ರ ಸಮಿತಿ ಕಾರ್ಯದರ್ಶಿ ಬಾಲಚಂದ್ರ ಭಟ್ ನಿರೂಪಿಸಿದರು
ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಧಿಕಾ ಪೈ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದ ಉಪ್ಪುಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ ಅವರನ್ನು ಅಭಿನಂದಿಸಲಾಯಿತು.