ಭಾಲ್ಕಿ:‘ಮುಂಗಾರು ಹಂಗಾಮು ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ತಾಲ್ಲೂಕಿನಲ್ಲಿ ಬಿತ್ತನೆ ಬೀಜ ಕೊರತೆ ಆಗದಂತೆ ನಿಗಾ ವಹಿಸಬೇಕು’ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ರೇಖಾ ವಿಲಾಸ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.‘ಕೃಷಿ ಚಟುವಟಿಕೆಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳನ್ನು ಸರಿಯಾದ ಸಮಯಕ್ಕೆ ದಾಸ್ತಾನು ಮಾಡಿಕೊಂಡು ಎಲ್ಲ ರೈತ ಸಂಪರ್ಕ ಕೇಂದ್ರಗಳಿಗೆ ತಲುಪಿಸಬೇಕು’ ಎಂದರು.
‘ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಎಲ್ಲ ರೈತರಿಗೂ ಅಗತ್ಯ ಪ್ರಮಾಣದ ಬೀಜ ಸಕಾಲಕ್ಕೆ ದೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ತಿಳಿಸಿದರು.
ಬೀಜಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಕಳಪೆಮಟ್ಟದ ಬೀಜ ದೊರೆಯದಂತೆ ನೋಡಿಕೊಳ್ಳುವುದು ಕೃಷಿ ಅಧಿಕಾರಿಗಳ ಪ್ರಮುಖ ಜವಬ್ದಾರಿ’ ಎಂದು ತಿಳಿಸಿದರು.
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕುಸಿತ ಕಂಡಿರುವುದಕ್ಕೆ ರೇಖಾ ಪಾಟೀಲ ಅಸಮಧಾನ ವ್ಯಕ್ತ ಪಡಿಸಿದರು. ಸದಸ್ಯರು ದನಿ ಗೂಡಿಸಿ ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ್ ಸಭೆಗೆ ಗೈರು ಆಗಿದ್ದು, ಕೆಲಕಾಲ ಸಭೆಯಲ್ಲಿ ಬಿಸಿ ಚರ್ಚೆಗೆ ಗ್ರಾಸವಾಯಿತು. ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ಪಂಚಾಯಿತಿಯ 2017-18ನೇ ಸಾಲಿನ ಆಯವ್ಯಯದಲ್ಲಿ ಯೋಜನೆ ಹಾಗೂ ಯೋಜನೆಯೇತರ ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ₹10420.68 ಲಕ್ಷ ವೆಚ್ಚದ ಬಜೆಟ್ನ್ನು ರೇಖಾ ಪಾಟೀಲ ಮಂಡಿಸಿದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಾರುತಿರಾವ ಮಗರ, ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ಇದ್ದರು.