ಹೇಗ್, ನೆದರ್ಲೆಂಡ್: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾದವ್ ಅವರಿಗೆ ಪಾಕಿಸ್ತಾನ ಸೇನಾ ನ್ಯಾಯಾಲಯವು ವಿಧಿಸಿರುವ ಗಲ್ಲು ಶಿಕ್ಷೆಗೆ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಗುರುವಾರ ತಡೆ ನೀಡಿದೆ.
ನಿಗದಿಯಂತೆ ಗುರುವಾರ ಮಧ್ಯಾಹ್ನ 3.30ಕ್ಕೆ ಐಸಿಜೆ ನ್ಯಾಯಮೂರ್ತಿ ರೋನಿ ಅಬ್ರಾಹಂ ಅವರು ತೀರ್ಪು ಪ್ರಕಟಿಸಿದರು.
ಭಾರತದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ‘ಮುಂದಿನ ಆದೇಶದವರೆಗೆ ಜಾದವ್ ಅವರಿಗೆ ಗಲ್ಲು ಶಿಕ್ಷೆ ಜಾರಿ ಮಾಡಬಾರದು’ ಎಂದು ಹೇಳಿದೆ.
ಈ ಪ್ರಕರಣದಲ್ಲಿ ಭಾರತ ಮತ್ತು ಪಾಕಿಸ್ತಾನ ಪರ ವಕೀಲರು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಸೋಮವಾರ (ಮೇ 15) ವಾದ ಮಂಡಿಸಿದ್ದರು.
‘ಜಾದವ್ ಅವರನ್ನು ಇರಾನ್ನಿಂದ ಅಪಹರಿಸಿರುವ ಪಾಕಿಸ್ತಾನ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಸೇನಾ ನ್ಯಾಯಾಲಯದ ಈ ತೀರ್ಪು ವಿಯೆನ್ನಾ ಒಪ್ಪಂದ ಹಾಗೂ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ’ ಎಂದು ಭಾರತ ಪರ ವಕೀಲ ಹರೀಶ್ ಸಾಳ್ವೆ ಅವರು ವಾದಿಸಿದ್ದರು.
ಪಾಕಿಸ್ತಾನದ ಪರ ವಾದ ಮಂಡಿಸಿದ್ದ ಕ್ಯೂ.ಸಿ. ಖಾವರ್ ಖುರೇಶಿ, ‘ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸುವ ಅಗತ್ಯವೇ ಇರಲಿಲ್ಲ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರಕರಣ. ರಾಷ್ಟ್ರೀಯ ಭದ್ರತೆ ವಿಚಾರವನ್ನು ಅಂತರರಾಷ್ಟ್ರೀಯ ನ್ಯಾಯಾಲಯ ತೀರ್ಮಾನಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದರು.
‘ಜಾದವ್ ಅಪರಾಧಿ ಎಂಬುದನ್ನು ಸಾಬೀತುಪಡಿಸಲು ಪಾಕಿಸ್ತಾನದ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಜಾದವ್ ತಪ್ಪೊಪ್ಪಿಗೆ ವಿಡಿಯೊ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯ’ ಎಂದು ಖುರೇಶಿ ವಾದಿಸಿದ್ದರು.
ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆಯ ಮಾಹಿತಿಯನ್ನು ಭಾರತದೊಂದಿಗೆ ಹಂಚಿಕೊಂಡಿದ್ದಾಗಿ ಪಾಕಿಸ್ತಾನವು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು.
ಐಸಿಜೆ ತೀರ್ಪಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆಯ ವಕ್ತಾರರು, ‘ಜಾದವ್ ಪ್ರಕರಣದಲ್ಲಿ ಭಾರತವು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಸತ್ಯವನ್ನು ಮರೆಮಾಚಲು ಯತ್ನಿಸುತ್ತಿದೆ. ಜಾದವ್ ವಿರುದ್ಧ ಇರುವ ಪ್ರಮುಖ ಸಾಕ್ಷ್ಯಾಧಾರಗಳನ್ನು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಹೇಳಿದ್ದಾರೆ.
‘ಐಸಿಜೆ ಆದೇಶವು ಕುಲಭೂಷಣ್ ಜಾದವ್ ಅವರ ಕುಟುಂಬ ಸದಸ್ಯರಿಗೆ ಹಾಗೂ ಭಾರತದ ಜನತೆಗೆ ನೆಮ್ಮದಿ ತಂದಿದೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
The ICJ order has come as a great relief to the familly of Kulbhushan Jadhav and people of India.
— Sushma Swaraj (@SushmaSwaraj) May 18, 2017
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.