ಗದಗ: ವೃಂದ ಹಾಗೂ ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸಬೇಕು, ಮೀರಾ ಸಕ್ಸೇನಾ ನೇತೃತ್ವದ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಪಶು ಪಾಲನೆ ಇಲಾಖೆ ಅಧಿಕಾರಿಗಳು, ನೌಕರರು ಗುರುವಾರ ಕರ್ತವ್ಯದಿಂದ ದೂರ ಉಳಿದು ನಗರದ ಹಳೆ ಬಸ್ ನಿಲ್ದಾಣದ ಹತ್ತಿರವಿರುವ ಇಲಾಖೆಯ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವೈದ್ಯಾಧಿಕಾರಿಗಳು, ಪರೀಕ್ಷಕರು ಹಾಗೂ ಜಾನುವಾರು ಅಧಿಕಾರಿಗಳು ಜಿಲ್ಲೆಯಲ್ಲಿರುವ ಎಲ್ಲ ಪಶು ಆಸ್ಪತ್ರೆ, ಪಶು ಚಿಕಿತ್ಸಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಬಂದ್ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಏ.7 ರೊಳಗೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸುವಂತೆ ಸಂಘಗಳಿಂದ ಮನವಿ ಸಲ್ಲಿಸಲಾಗಿತ್ತು. ವಿಳಂಬ ಧೋರಣೆ ಅನುಸರಿಸಿದರೆ, ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಪತ್ರ ನೀಡಲಾಗಿತ್ತು. ಈ ಕುರಿತು ಯಾವುದೇ ರೀತಿ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.
ಶೀಘ್ರವೇ ವೃಂದ ಮತ್ತು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸಬೇಕು. ಐದು ವರ್ಷಗಳಿಂದ ಯಾವುದೇ ಪದೋನ್ನತಿ, ಹಣಕಾಸು ಸೌಲಭ್ಯವಿಲ್ಲದೇ ಕಾರ್ಯನಿರ್ವಹಿಸುತ್ತಿ ರುವ ಸಿಬ್ಬಂದಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.