ಗೌರಿಬಿದನೂರು: ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಿತಿ ಮೀರಿ ವಂತಿಗೆ ವಸೂಲಿ ಮಾಡುತ್ತಿವೆ. ಶಿಕ್ಷಣ ವ್ಯಾಪಾರೀಕರಣ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಚರಣ್ ರೆಡ್ಡಿ ಮಾತನಾಡಿ, ‘ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ. ಅಧಿಕ ಶುಲ್ಕ ವಸೂಲಿ ಮಾಡಬಾರದೆಂದು ಪದೇ ಪದೇ ಆದೇಶ ಮಾಡಿದರೂ ಬೆಲೆ ಇಲ್ಲದಂತಾಗಿದೆ. ಶೂ, ಪಠ್ಯಪುಸ್ತಕ, ಬ್ಯಾಗ್, ನೋಟ್ ಪುಸ್ತಕ, ಸಮವಸ್ತ್ರ ಮಾರಾಟ ಮಾಡುವ ಮೂಲಕ ಲಕ್ಷಾಂತರ ಹಣ ಲೂಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
‘ಕಳೆದ ವರ್ಷ ರಾಜ್ಯದಲ್ಲಿ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ಫಲಿತಾಂಶ ಹೆಚ್ಚಿಸುವ ಪ್ರಯತ್ನವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದವು. ಈ ಶಿಕ್ಷಣ ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರ ಇದುವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.
‘ಕೆಲ ಶಿಕ್ಷಣ ಸಂಸ್ಥೆಗಳು ಆರ್ಟಿಇ ಸೀಟುಗಳನ್ನು ಆಡಳಿತ ಮಂಡಳಿ ಸೀಟುಗಳನ್ನಾಗಿ ಪರಿವರ್ತಿಸಿ ಲಕ್ಷಾಂತರ ಹಣ ಮಾಡುತ್ತಿವೆ. ಇದರಿಂದ ಬಡವರಿಗೆ ಮೋಸವಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಸಂದರ್ಭದಲ್ಲಿ ಹಣ ರಹಿತ ವಹಿವಾಟು ನಡೆಸುವಂತೆ ಸರ್ಕಾರದ ಸುತ್ತೋಲೆ ಇದ್ದರೂ ಯಾವುದೇ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ’ ಎಂದರು.
ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಅಕ್ಕಮಹಾದೇವಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು ವಿನಯ್ ಪ್ರಸಾದ್, ಫಣೀಂದ್ರ, ನಂದನ್, ಸುಮಂತ್, ಮಮತಾ, ಆಸಾ, ಹರ್ಷಿತಾ, ಮಂಜುಳಾ ಹಾಜರಿದ್ದರು.