ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ನಿರ್ಧರಿಸಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಪ್ರತಿಪಕ್ಷಗಳು ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಈಗಾಗಲೇ ಪ್ರಯತ್ನ ಆರಂಭಿಸಿವೆ. ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರ ನೀಡಿದ್ದಾರೆ.
‘ನನ್ನ ಮನಸ್ಸಿನಲ್ಲಿರುವ ಹೆಸರನ್ನು ಹೇಳಬೇಕಾದರೂ ಮೊದಲು ಅದು ಪಕ್ಷದೊಳಗೆ ಚರ್ಚೆಯಾಗಬೇಕು’ ಎಂದು ಶಾ ಹೇಳಿದ್ದಾರೆ. ಅಲ್ಲದೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಶಿವಸೇನೆ ಬೇಡಿಕೆಯನ್ನೂ ಅವರು ತಿರಸ್ಕರಿಸಿದ್ದಾರೆ.
ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಶೀಘ್ರದಲ್ಲೇ ಆ ಕಾರ್ಯದಲ್ಲಿ ಯಶಸ್ವಿಯಾಗಲಿದೆ ಎಂದು ಶಾ ಹೇಳಿದ್ದಾರೆ.