ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಪಕ್ಷದ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ’ ಎಂದು ಜಿ.ಪರಮೇಶ್ವರ್ ಪುನರುಚ್ಚರಿಸಿದರು.
‘ಅಧ್ಯಕ್ಷರಾಗಿ ನೀವೇ ಮುಂದುವರಿಯಿರಿ ಎಂದರೆ ಇನ್ನೂ ಹೆಚ್ಚಿನ ಕೆಲಸ ಮಾಡಲು ಅನುಕೂಲ ಆಗುತ್ತದೆ. ಒಂದು ವೇಳೆ ಬೇರೆಯವರಿಗೆ ಬಿಟ್ಟುಕೊಡುವಂತೆ ಸೂಚಿಸಿದರೆ ಅದಕ್ಕೂ ಸಿದ್ಧ’ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.
ಸೋಮವಾರದಿಂದ ಐದು ದಿನ ನಿರಂತರವಾಗಿ ಜಿಲ್ಲಾ ಮುಖಂಡರ ಸಭೆ ನಡೆಯುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗುವುದು. ಜಿಲ್ಲಾ ಸಮಿತಿ ಮುಖಂಡರ ನಡುವಿನ ಭಿನ್ನಾಭಿಪ್ರಾಯಗಳನ್ನೂ ಈ ಸಂದರ್ಭದಲ್ಲಿ ಪರಿಹರಿಸಲಾಗುವುದು. 2018ರಲ್ಲೂ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ, ಸಂಘಟನೆ ಬಲಿಷ್ಠಗೊಳಿಸುವಂತೆ ಸೂಚನೆ ನೀಡಲಾಗುವುದು. ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಿಂದಲೂ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದರು.
ದೂರು ನೀಡಿದ ಶಿವಮೂರ್ತಿ ನಾಯಕ್
ಕರ್ನಾಟಕ ಭೂಸುಧಾರಣೆಗಳ (ತಿದ್ದುಪಡಿ) ಮಸೂದೆ ವಿಧಾನಮಂಡಲ ಉಭಯ ಸದನಗಳಲ್ಲಿ ಅಂಗೀಕಾರವಾದರೂ ರಾಜ್ಯಪಾಲರಿಗೆ ಕಳುಹಿಸದಿರುವ ಬಗ್ಗೆ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ನಾಯಕ್, ಕೆ.ಸಿ. ವೇಣುಗೋಪಾಲ್ ಅವರಿಗೆ ದೂರು ನೀಡಿದ್ದಾರೆ.