ಬೆಂಗಳೂರು: ಎಂಡೋಪೀಡಿತರಿಗೆ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿಯು ಇದೇ 27ರಂದು ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ಪ್ರತಿಭಟನಾ ಸಭೆ ಮತ್ತು ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.
ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಕೆ.ಶ್ರೀಧರ ಗೌಡ, ‘ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 7,000ಕ್ಕೂ ಹೆಚ್ಚು ಎಂಡೋ ಪೀಡಿತರು ಇದ್ದಾರೆ. ಈ ಪೈಕಿ ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ತಾಲ್ಲೂಕಿನ 92 ಗ್ರಾಮಗಳಲ್ಲಿ 3,612 ಮಂದಿ ಇದ್ದಾರೆ. ಇವರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ’ ಎಂದರು.
‘ಯಾವುದೇ ಸರ್ಕಾರಗಳು ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಿಲ್ಲ. ನ್ಯಾಯಾಲಯಗಳ ಆದೇಶಗಳನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ’ ಎಂದು ದೂರಿದರು.
‘ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ನ್ಯಾಯ ಸಿಕ್ಕಿಲ್ಲ. ಎಂಡೋ ಪೀಡಿತ ಸಂತ್ರಸ್ತರ ಪರಿಸ್ಥಿತಿ ಹೀನಾಯವಾಗಿದೆ. ಅವರಿಗೆ ಪುನರ್ವಸತಿ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.