ಬಾಗೇಪಲ್ಲಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ರೈತಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸರ್ಕಾರ ವಜಾ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ.
ಪಶ್ಚಿಮ ಬಂಗಾಳದಲ್ಲಿ ರೈತರ ಮೇಲೆ ನಡೆದ ಲಾಠಿ ಪ್ರಹಾರ ನಡೆಸಿದ ಪಶ್ಚಿಮ ಬಂಗಾಳ ಸರ್ಕಾರದ ಧೋರಣೆ ಖಂಡಿಸಿ ರಸ್ತೆ ತಡೆ ನಡೆಸಿದ ನಂತರ ಸಂಘಟನೆಗಳ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್ಎನ್) ತಾಲ್ಲೂಕು ಘಟಕದ ಕಾರ್ಯದರ್ಶಿ ಜೆಸಿಬಿ ಮಂಜುನಾಥ ರೆಡ್ಡಿ, ರೈತರ ಮೇಲೆ ಏಕಾಏಕಿ ದಾಳಿ ನಡೆಸಿ, ಮನಬಂದಂತೆ ಹಲ್ಲೆ ನಡೆಸಿದ್ದು ಖಂಡನೀಯ. ಇಂಥ ಅಮಾನವೀಯ ಕೃತ್ಯದ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು
ರೈತ ದೇಶದ ಬೆನ್ನೆಲುಬು ಎಂದು ಹೇಳುತ್ತಲೇ ಆಳುವ ಎಲ್ಲ ಸರ್ಕಾರಗಳು ನಿರಂತರವಾಗಿ ಶೋಷಣೆ ಮಾಡುತ್ತಿವೆ. ವಿವಿಧ ಬೇಡಿಕೆ ಈಡೇರಿಕೆಗಾಗಿ ಹೋರಾಡುತ್ತಿರುವ ರೈತರ ಸಮಸ್ಯೆಗೆ ಸ್ಪಂದಿಸುವ ಬದಲಾಗಿ ದೌರ್ಜನ್ಯ ನಡೆಸುವುದು ಕಾನೂನು ವಿರೋಧಿ ಧೋರಣೆ. ಇದು ಸರ್ಕಾರದ ಅಮಾನವೀಯ ವರ್ತನೆಯ ಸಂಕೇತ ಎಂದು ಟೀಕಿಸಿದರು.