ಉಡುಪಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಶೈಕ್ಷಣಿಕ ಅನುದಾನವನ್ನು 60:40ರ ಅನುಪಾತದಲ್ಲಿ ನೀಡುವಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ವರ್ಗದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ನರ್ಸಿಂಗ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಪಡೆಯಲು ಆಗುತ್ತಿರುವ ತೊಂದರೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದ್ದು, ಈ ಆಯ್ಕೆ ಪ್ರಕ್ರಿಯೆ ಆನ್ಲೈನ್ ಮೂಲಕ ರಾಜ್ಯಮಟ್ಟದಲ್ಲಿ ನಡೆಯುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್ ತಿಳಿಸಿದರು.
ಮುದೂರು ಸರ್ವೇ ನಂಬರ್ 163 ಜಾಗವನ್ನು ಸಹಾಯಕ ಕಮಿಷನರ್, ಅರಣ್ಯಾಧಿಕಾರಿ, ತಹಶೀಲ್ದಾರ್ ಹಾಗೂ ದೂರುದಾರರ ಸಮಕ್ಷಮದಲ್ಲಿ ಮರು ಸರ್ವೇ ಮಾಡಿದ್ದು, ಯಾವುದೇ ಜಾಗ ಒತ್ತುವರಿಯಾಗಿಲ್ಲ ಎಂದು ಭೂ ಮಾಪನ ಅಧಿಕಾರಿ ಸ್ಪಷ್ಟಪಡಿಸಿದರು.
ಕಾರ್ಕಳದ ಕುಕ್ಕುಂದೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಯಲ್ಲಿರುವ ನೀರಿನ ಟ್ಯಾಂಕ್ ಸೋರುವಿಕೆಯನ್ನು ಸರಿಪಡಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಟ್ಯಾಂಕ್ ರಚನೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅಧಿಕಾರಿ ತಿಳಿಸಿದರು.
ಪಡುಬಿದ್ರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ‘ನಡ್ಲಾನ್ ಗ್ಯಾಸ್ ಗೋಡೌನ್’ ಸ್ಥಳಾಂತರದ ಬಗ್ಗೆ ಒಂದು ದಿನಗಳೊಳಗೆ ವರದಿ ನೀಡಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಕುಂದಾಪುರ ತಾಲ್ಲೂಕು ಪಂಚಾಯಿತಿ ಬಳಿ ಇರುವ ಬಿಸಿಎಂ ಇಲಾಖೆ ವಿದ್ಯಾರ್ಥಿ ನಿಲಯದ ಪಕ್ಕದಲ್ಲಿರುವ ಒಳಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಿ, ಶೀಘ್ರದಲ್ಲಿ ಚರಂಡಿಯ ದುರಸ್ಥಿ ಕಾರ್ಯವನ್ನು ಕೈಗೊಳ್ಳುವಂತೆ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.
ಬಿದ್ಕಲ್ಕಟ್ಟೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಸೂಕ್ತ ಪರಿಹಾರ ಕೊಡಿಸುವಂತೆ ಹಾಗೂ ಹಳ್ಳಿಹೊಳೆಗೆ ರಸ್ತೆ ಸಂಪರ್ಕ ಕಲ್ಪಿಸುವಂತೆ ವಾಸುದೇವ ಮುದುಗಲ್ ಒತ್ತಾಯಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.