ಬೆಂಗಳೂರು: ಬೆಳೆವಿಮೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಪ್ರಸಕ್ತ ಸಾಲಿಗೆ ₹ 841.11 ಕೋಟಿ ಮೀಸಲಿಟ್ಟಿದೆ ಎಂದು ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ಬಿ. ಶಿವರಾಜು ತಿಳಿಸಿದರು.
ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಗುರುವಾರ ಏರ್ಪಡಿಸಿದ್ದ ‘ಬೆಳೆವಿಮೆ ಸಮಸ್ಯೆಗಳು ಮತ್ತು ಪರಿಹಾರಗಳು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
2016ರಿಂದ ಜಾರಿಯಾಗಿರುವ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ’ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. ರಾಜ್ಯ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ₹ 845 ಕೋಟಿ ಮೀಸಲಿಟ್ಟಿತ್ತು. ಆದರೆ, ₹ 881 ಕೋಟಿ ಖರ್ಚಾಗಿದೆ ಎಂದು ಹೇಳಿದರು.
‘ಈ ವರ್ಷಕ್ಕೆ ಕೇಂದ್ರ ಸರ್ಕಾರ ಶೇ 40ರಷ್ಟು ಗುರಿ ನಿಗದಿ ಮಾಡಿದೆ. 40 ಬೆಳೆಗಳು ವಿಮಾ ಯೋಜನೆ ವ್ಯಾಪ್ತಿಯಲ್ಲಿವೆ ಎಂದು ಅವರು ವಿವರಿಸಿದರು.