ಬೆಂಗಳೂರು: ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಮತ್ತು ಪೂರಕ ಉಪಕರಣಗಳ ಖರೀದಿಗಾಗಿ ಟೆಂಡರ್ ಪ್ರಕ್ರಿಯೆ ನಡೆಸದಂತೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ, ಹಣಕಾಸು ಅಧಿಕಾರಿ ಮತ್ತು ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ.
‘ಸಿಲಿಕಾನ್ ಎಜುಕೇಷನ್ ಮತ್ತು ಚಾರಿಟೆಬಲ್ ಸೊಸೈಟಿ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಮೂರ್ತಿಗಳಾದ ರವಿ ಮಳೀಮಠ ಮತ್ತು ಮೈಕಲ್ ಡಿ. ಕುನ್ಹಾ ಅವರಿದ್ದ ರಜಾಕಾಲದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ನಾವೀದ್ ಅಹ್ಮದ್, ‘ವಿಶ್ವವಿದ್ಯಾಲಯಕ್ಕಾಗಿ ಸಾಫ್ಟ್ವೇರ್ ಅಭಿವೃದ್ಧಿಪಡಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಈ ಹಂತದಲ್ಲಿ ಕಂಪ್ಯೂಟರ್, ಸಿಸಿಟಿವಿ ಕ್ಯಾಮೆರಾ ಸೇರಿ ಮತ್ತಿತರ ಉಪಕರಣಗಳನ್ನು ಖರೀದಿಸದಂತೆ ಸರ್ಕಾರ ಸೂಚನೆ ನೀಡಿದೆ ಎಂದರು.
ಕುಲಪತಿ ಸದ್ಯದಲ್ಲೇ ನಿವೃತ್ತಿ ಆಗಲಿದ್ದು, ತರಾತುರಿಯಲ್ಲಿ ಟೆಂಡರ್ ನಡೆಸುತ್ತಿರುವುದು ಕೆಟಿಟಿಪಿ ಕಾಯ್ದೆ ಉಲ್ಲಂಘನೆಯಾಗುತ್ತದೆ ಎಂದು ಮನವಿ ಮಾಡಿದರು. ವಾದ ಆಲಿಸಿದ ಪೀಠ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.