ಬಾಗೇಪಲ್ಲಿ: ‘ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯವಹಿಸಿದರೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು ವಿನಾಕಾರಣ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ನ್ಯಾಯಾಧೀಶ ಆರ್.ಜೆ.ಎಸ್.ಪ್ರವೀಣ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಎದುರು ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು - ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಬ್ ಇನ್ಸ್ಪೆಕ್ಟರ್ ನರೇಶ್ ನಾಯಕ್ ಮಾತನಾಡಿ, ‘ಮಕ್ಕಳಿಗೆ ಆಸ್ತಿ ಸಂಪಾದನೆ ಮಾಡಬೇಡಿ, ಶಿಕ್ಷಣ ಕೊಡಿಸಿ. ಸಮಾಜದಲ್ಲಿ ಗೌರವಾನ್ವಿತ ಜೀವನ ನಡೆಸಲಿಕ್ಕೆ ಪೋಷಕರು ಸಹಕಾರಿಯಾಗಬೇಕು’ ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಸುಬ್ಬಿರೆಡ್ಡಿ ಮಾತನಾಡಿ, ‘ಕಾನೂನು ಅರಿವು-ನೆರವು ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾನೂನು ಮಹತ್ವ ಪಡೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.
ತಾಲ್ಲೂಕು ಆಡಳಿತ ಆರೋಗ್ಯಅಧಿಕಾರಿ ಸತ್ಯನಾರಾಯಣರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆದಿಲಕ್ಷ್ಮಮ್ಮ, ವಕೀಲ ಜಯಪ್ಪ, ಚೇಳೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಭಾಗವಹಿಸಿದ್ದರು.