ಭೋಪಾಲ್: ಮಧ್ಯಪ್ರದೇಶದ ಬಾಲಘಾಟ್ನ ಖಾರಿ ಎಂಬ ಗ್ರಾಮದಲ್ಲಿ ಬುಧವಾರ ಸಂಭವಿಸಿದ್ದ ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿದೆ.
ಬರ್ಸಾ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬುಧವಾರ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಗಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತ ಸಂಭವಿಸಿದ ಬಳಿಕ ಕಾರ್ಖಾನೆಯ ಮಾಲೀಕ ವಾಹೀದ್ ಅಹಮದ್ ವರ್ಸಿ ತಲೆ ಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಾಲಘಾಟ್ನ ಎಸ್ಪಿ ಅಮಿತ್ ಸಂಘಿ ಅವರು ಹೇಳಿದ್ದಾರೆ.
ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸದಲ್ಲಿ ನಿರತವಾಗಿದ್ದಾಗ ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕೆಲವೇ ಕ್ಷಣಗಳಲ್ಲಿ ಕಾರ್ಖಾನೆಯನ್ನು ಆವರಿಸಿದೆ. ಇದರಿಂದ ಕಾರ್ಮಿಕರು ದುರಂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಘಟನೆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಈ ದುರಂತದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಬಾಲಘಾಟ್ ಜಿಲ್ಲಾಧಿಕಾರಿ ಭರತ್ ಯಾದವ್ ಹೇಳಿದ್ದಾರೆ.
ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ಮಧ್ಯಪ್ರದೇಶದ ಧಾಟಿಯಾದಲ್ಲಿ ನಡೆದ ಪಟಾಕಿ ಕಾರ್ಖಾನೆ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದರು. ಅದೇ ತಿಂಗಳು ಇಂಧೋರ್ನಲ್ಲಿ ನಡೆದ ಮತ್ತೊಂದು ಪಟಾಕಿ ದುರಂತದಲ್ಲಿ ಐವರು ಮೃತಪಟ್ಟಿದ್ದರು.