ಬಂಗಾರಪೇಟೆ: ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ಒದಗಿಸುತ್ತಿದೆ. ಅದರ ಸದ್ಬಳಕೆ ಮಾಡಿಕೊಂಡು ಉತ್ತಮ ಆರೋಗ್ಯಕ್ಕೆ ಗಮನ ನೀಡಬೇಕು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ಕಾರಹಳ್ಳಿ ಪಂಚಾಯಿತಿ ಕೇಂದ್ರದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಗರ್ಭಾವಸ್ಥೆಯಿಂದಲೇ ಮಕ್ಕಳ ಬೆಳವಣಿಗೆಗೆ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಹೇಳಿದರು.
ಗರ್ಭಿಣಿಯರಿಗೆ ಗುಣಮಟ್ಟದ ಆಹಾರ ಧಾನ್ಯ, ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಟಿಕ ಆಹಾರ ಒದಗಿಸುತ್ತಿದೆ. ದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ನುಡಿದರು.
ಕ್ಷೇತ್ರದಲ್ಲಿ ಪ್ರಸಕ್ತ ಸಾಲಿಗೆ 41 ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ ಮಂಜೂರು ಮಾಡಿಸಲಾಗಿದೆ. ಮುಂದೆ ಹೆಚ್ಚಿನ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರವನ್ನು ಒತ್ತಾಯ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರ ರಾಜಕೀಯ ಲಾಭಕ್ಕಾಗಿ ಸಾಲ ಮನ್ನಾ ಮಾಡಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ವೆಂಕಟಮುನಿಯಪ್ಪ ಹೇಳಿರುವುದು ಸರಿಯಲ್ಲ. ಮೋದಿ ಅವರು ಏನು ಮಾಡಿದ್ದಾರೆ ಎನ್ನುವ ಬಗ್ಗೆ ಜನರಿಗೆ ತಿಳಿಸಲಿ. ಅದುಬಿಟ್ಟು ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕ ಹಕ್ಕು ಅವರಿಗಿಲ್ಲ ಎಂದರು.
ಸಿಡಿಪಿಒ ಶಂಕರಮೂರ್ತಿ, ಪಂಚಾಯಿತಿ ಅಧ್ಯಕ್ಷ ಶಬ್ಬೀರ್ ಹುಸೇನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಭಾಗ್ಯ ಲಕ್ಷ್ಮಿ, ಸದಸ್ಯ ಪ್ರತಾಪ್, ಶಾರದಾ ಶ್ರೀನಿವಾಸ್, ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಚಿನ್ನಿ ವೆಂಕಟೇಶ್, ಮುಖಂಡ ಶ್ರೀನಿವಾಸ್ ಹಾಜರಿದ್ದರು.