ಭದ್ರಾವತಿ: ‘ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಗಳ ಕುರಿತ ತಿದ್ದುಪಡಿ ಮಸೂದೆ ಜಾರಿಗೊಳಿಸುವ ಮುನ್ನ ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕು’ ಎಂದು ಭಾರತೀಯ ವೈದ್ಯಕೀಯ ಸಂಘದ (ಐ.ಎಂ.ಎ) ರಾಜ್ಯ ಘಟಕದ ಅಧ್ಯಕ್ಷ ಡಾ. ರಾಜಶೇಖರ ಎಸ್. ಬಳ್ಳಾರಿ ಒತ್ತಾಯಿಸಿದರು.
ಇಲ್ಲಿನ ಐಎಂಎ ಶಾಖೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಸರ್ಕಾರ ಯಾವುದೇ ರೀತಿ ಚರ್ಚೆ ನಡೆಸದೇ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.
‘ಖಾಸಗಿ ಆಸ್ಪತ್ರೆಗಳು ಸರ್ಕಾರದ ಎಲ್ಲಾ ಯೋಜನೆಗಳನ್ನು ಚಾಚೂ ತಪ್ಪದೆ ಜಾರಿ ಮಾಡುವ ಮೂಲಕ ಸಾರ್ವಜನಿಕ ಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಮಸೂದೆ ಜಾರಿ ಮುನ್ನ ವೈದ್ಯಕೀಯ ಸಂಘದ ಜತೆ ಮಾತುಕತೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಅದನ್ನು ಪಾಲಿಸದೇ ಜಾರಿಗೊಳಿಸಲು ಮುಂದಾಗಿರುವುದಕ್ಕೆ ಪ್ರತಿಭಟನೆ ನಡೆಸಿದೆವು’ ಎಂದು ಹೇಳಿದರು.
ರಕ್ಷಣೆ ಅಗತ್ಯ: ಇತ್ತೀಚಿನ ದಿನಗಳಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಯೋಚಿಸಬೇಕು. ವೈದ್ಯರಿಗೆ ಅಗತ್ಯ ರಕ್ಷಣೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.
ವೈದ್ಯರು ತಪ್ಪು ಮಾಡಿದರೆ ಅವರ ವಿರುದ್ಧ ದೂರು ಸಲ್ಲಿಸಲು ಪ್ರತ್ಯೇಕ ಪ್ರಾಧಿಕಾರವಿದೆ. ಗ್ರಾಹಕರ ವೇದಿಕೆಯ ಮೊರೆಹೋಗಿ, ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಅದನ್ನು ಬಿಟ್ಟು ಹಲ್ಲೆ ನಡೆಸುವುದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.
ವೈದ್ಯಕೀಯ ಸಂಘ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಟುಂಬದವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ– ಕಾಲೇಜು ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಡಾ. ಶರಣಪ್ಪ, ಡಾ.ಜಯಶ್ರೀ, ಡಾ.ಸಂದೀಪ ಕುಬ್ಸದ್, ಡಾ.ರಾಮಕೃಷ್ಣ, ಡಾ.ಹರೀಶ ದೇಲಂತಬೆಟ್ಟು, ಡಾ.ರವೀಂದ್ರನಾಥ ಕೋಠಿ, ಡಾ.ವೀಣಾಭಟ್ ಹಾಜರಿದ್ದರು.