ಮಾಲೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿಯ ಮಾರಿಕಾಂಬ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.
ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ಘಟಕದ ಅಧ್ಯಕ್ಷ ಜಿ. ಗೋವಿಂದಸ್ವಾಮಿ ಮಾತನಾಡಿ, ‘ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ನಿತ್ಯ ಹಲ್ಲೆ ನಡೆಸುತ್ತಿದ್ದಾರೆ. ಕೊಲೆ ಪ್ರಕರಣಗಳೂ ಹೆಚ್ಚುತ್ತಿವೆ.
ಮಂಗಳೂರಿನಲ್ಲಿ ಆರ್ಎಸ್ಎಸ್ ಘೋಷ ವಾದಕ ಶರತ್ ಮಡಿವಾಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಇದಕ್ಕೆ ತಾಜಾ ಉದಾಹರಣೆ. ಸಂಘ ಪರಿವಾರದ ಕಾರ್ಯಕರ್ತರ ರಕ್ಷಣೆಗೆ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು. ನಂತರ ಪಿಎಸ್ಐ ಶ್ರೀಧರ್ ಅವರಿಗೆ ಬಿಜೆಪಿ ಮುಖಂಡರು ಮನವಿ ಸಲ್ಲಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್. ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಬಡಗಿ ಶ್ರೀನಿವಾಸ್, ಮುಖಂಡರಾದ ಎಸ್.ಎನ್. ಕೃಷ್ಣಯ್ಯ ಶೆಟ್ಟಿ, ಗುರುನಾಥರೆಡ್ಡಿ, ವೆಂಕಟೇಶ್ ಗೌಡ, ಸುರೇಶ್, ಮುನಿವೆಂಕಟಪ್ಪ, ರಾಮದಾಸು, ಭಾನುತೇಜ ಭಾಗವಹಿಸಿದ್ದರು.