ಮಡಿಕೇರಿ: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ನಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಇಲ್ಲಿನ ಗಾಂಧಿ ಮೈದಾನದಿಂದ ಪ್ರತಿಭಟನೆ ಆರಂಭಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ, ಧಿಕ್ಕಾರ ಕೂಗಿದರು.
ಪ್ರಧಾನ ಕಾರ್ಯದರ್ಶಿ ರೆಜಿತ್ಕುಮಾರ್ ಮಾತನಾಡಿ, ‘ರಾಜ್ಯ ಸರ್ಕಾರವು ರೈತರ ಪರವಾಗಿದ್ದು ಸಹಕಾರ ಸಂಘದ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಮಾತ್ರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲವನ್ನು ಈ ಕೂಡಲೇ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.
ಮುಖಂಡ ಸುಜಯ್ ನಾಣಯ್ಯ ಮಾತನಾಡಿ, ರಾಷ್ಟ್ರದಲ್ಲಿ ಶೇ 54ರಷ್ಟು ರೈತರಿಗೆ ಕೃಷಿಯೇ ಆಧಾರ. ರಾಜ್ಯದಲ್ಲಿ ಬರಗಾಲದಿಂದ ಹತ್ತು ಹಲವು ಸಮಸ್ಯೆ ಉಂಟಾಗಿದೆ. ಆದರೂ ಕೂಡ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಇರುವ ಸಾಲ ಮನ್ನಾ ಮಾಡುವತ್ತ ಗಮನಹರಿಸದೇ ಇರುವುದು ದುರದೃಷ್ಟಕರ ಎಂದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಹನೀಫ್, ಪ್ರಧಾನ ಕಾರ್ಯದರ್ಶಿ ಶಾಫಿ, ಮುರುಗ, ಮಿಥುನ್ ಹಾಜರಿದ್ದರು.