ಯಾದಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘದ ಸದಸ್ಯರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ರಾಜ್ಯ ಬಜೆಟ್ನಲ್ಲಿ ಸರ್ಕಾರ ಹಮಾಲಿ ಕಾರ್ಮಿಕರಿಗೆ ಘೋಷಿಸಿದ ಸ್ಮಾರ್ಟ್ ಕಾರ್ಡ್, ಭವಿಷ್ಯ ನಿಧಿ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಜಾರಿಯಾಗಬೇಕು. ಎಪಿಎಂಸಿ ಹಮಾಲಿ ಕಾರ್ಮಿಕರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ನಿತ್ಯ ರಸ್ತೆಯಲ್ಲಿ ಸಂಜೆಯವರೆಗೂ ನಿಂತು ಕೆಲಸ ಮಾಡುವವರಿಗೆ ಭವಿಷ್ಯತ್ತಿನಲ್ಲಿ ಜೀವನದ ಭದ್ರತೆ ಇಲ್ಲದೇ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದೇವೆ’ ಎಂದು ಹಮಾಲಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.
‘ನಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ವರ್ಷಗಳಿಂದ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ನಿಂದ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಇದಕ್ಕೆ ಪ್ರತಿಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 6 ವಿಭಾಗದ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಸ್ಮಾರ್ಟ್ ಕಾರ್ಡ್, ಭವಿಷ್ಯನಿಧಿ, ಅಪಘಾತ ವಿಮೆ ಸೇರಿದಂತೆ ಮತ್ತಿತರ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸೌಲಭ್ಯಗಳನ್ನು ಕಾರ್ಮಿಕರಿಗೆ ಪ್ರಸಕ್ತ ವರ್ಷದಿಂದಲೆ ಜಾರಿಯಾಗುವಂತೆ ಆದೇಶ ಹೊರಡಿಸಬೇಕು’ ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ತಿಮ್ಮಯ್ಯ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಯಂಕಪ್ಪ ಕೆಂಗಲ್, ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಗೋಸಿ, ಜೈಲಾಲ ತೋಟದಮನಿ, ಮಹ್ಮದ್ ಪೀರ, ನಾಗಪ್ಪ ಭಾಗವಹಿಸಿದ್ದರು.