ಉಡುಪಿ: ಪ್ರವಾಸಿ ತಾಣಗಳು, ಅವುಗಳ ಹಿನ್ನೆಲೆ, ಹೊಸ ಸೇರ್ಪಡೆ, ಸ್ಥಳೀಯ ಹಬ್ಬಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ವೆಬ್ಸೈಟ್ ರೂಪಿಸಿ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಶನಿವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಮಾಹಿತಿ, ಛಾಯಾಚಿತ್ರಗಳನ್ನು ಪರಿಷ್ಕರಿಸಲು ಪ್ರವಾಸೋದ್ಯಮ ಇಲಾಖೆ ಸಜ್ಜಾಗಿದೆ ಎಂದರು.
ಹೋಟೆಲ್ ಸಂಘದವರು ಪ್ರಚಾರಕ್ಕೆ ನೀಡಲೊಪ್ಪಿರುವ ಹೋರ್ಡಿಂಗ್ಗಳ ವಿನ್ಯಾಸವನ್ನು ಅಂತಿಮಪಡಿಸಲು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಅವರು ಸೂಚನೆ ನೀಡಿದರು.
ಡೈವಿಂಗ್ ನಡೆಸಲು ಕಾಪು ಕಡಲ ಪ್ರದೇಶ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆ ಪ್ರದೇಶವನ್ನು ಅಭಿವೃದ್ಧಿಪಡಿಸುವ ಸಂಬಂಧ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜನರಲ್ ತಿಮ್ಮಯ್ಯ ನ್ಯಾಷನಲ್ ಅಕಾಡೆಮಿ ಆಫ್ ಅಡ್ವೆಂಚರ್ನ ಸಲಹಾಗಾರರಾದ ಕೀರ್ತಿ ಪಾಯಸ್ ಅವರ ಅಭಿಪ್ರಾಯ ಪಡೆಯಿರಿ ಎಂದರು.
ಪ್ರವಾಸಿಗರಿಗೆ ಇಷ್ಟವಾಗುವ ರೀತಿಯಲ್ಲಿ ಹೋಂ ಸ್ಟೇಗಳು ಇರಬೇಕಾಗುತ್ತದೆ. ಆದ್ದರಿಂದ ಅವುಗಳನ್ನು ಅಭಿವೃದ್ಧಿಪಡಿಸುವುದು ಹೇಗೆ ಎಂಬುದರ ಬಗ್ಗೆ ಕಾರ್ಯಾಗಾರಗಳನ್ನು ನಡೆಸಲು ಇಲಾಖೆ ನಿರ್ಧರಿಸಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಹೇಳಿದರು.
ಮಲ್ಪೆ ಸಮೀಪದ ಪಡುಕೆರೆ ಅಭಿವೃದ್ಧಿಗಾಗಿ ನಿರ್ದೇಶನಾಲಯಕ್ಕೆ ಅಂದಾಜುಪಟ್ಟಿಯನ್ನು ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು. ಇಲಾಖೆ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ನೀಡಿದರು.
ತ್ರಾಸಿ, ಮರವಂತೆ ಕಡಲ ಕಿನಾರೆಯಲ್ಲಿರುವ ಅಕ್ರಮ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಶಿಲ್ಪಾನಾಗ್ ಅವರಿಗೆ ಡಿಸಿ ಸೂಚನೆ ನೀಡಿದರು. ಮಣಿಪಾಲದ ಮಣ್ಣಪಳ್ಳ ಕೆರೆಯ ಅಭಿವೃದ್ಧಿ ಬಗ್ಗೆಯೂ ಚರ್ಚೆ ನಡೆಯಿತು.
ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆಯಿಂದ ಅನುದಾನ ಪಡೆದು ಕೆರೆಯನ್ನು ಅಭಿವೃದ್ಧಿಪಡಿಸಿ ಎಂದು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ ಇದ್ದರು.