ಶನಿವಾರಸಂತೆ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಶನಿವಾರಸಂತೆ ಹೋಬಳಿ ಕಾಂಗ್ರೆಸ್ ವತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆ ನಾಡ ಕಚೇರಿ ಆವರಣದಲ್ಲಿ ಸಮಾವೇಶಗೊಂಡಿತು.
ಸಂಕಷ್ಟದಲ್ಲಿರುವ ಕರ್ನಾಟಕದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂಬ ಮನವಿಯನ್ನು ಪ್ರಧಾನಮಂತ್ರಿ ಅವರಿಗೆ ರವಾನಿಸುವಂತೆ ಕಂದಾಯ ಪರಿವೀಕ್ಷಕ ಮಧುಸೂದನ್ ಅವರಿಗೆ ಸಲ್ಲಿಸಲಾಯಿತು.
ಕಾಂಗ್ರೆಸ್ನ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, 5 ವರ್ಷಗಳಿಂದ ರೈತ ಸಮೂಹ ಬರಗಾಲದಿಂದ ತತ್ತರಿಸಿ ಹೋಗಿದೆ. ಪ್ರಸ್ತುತ ವರ್ಷದಲ್ಲಿ ಮತ್ತೆ ಬರಗಾಲದ ಛಾಯೆ ಮೂಡಿದ್ದು ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗುವ ಸಂಭವವಿದೆ. ನೀರಿನ ಕೊರತೆಯಿಂದ ಕೃಷಿ ಅಭಿವೃದ್ಧಿ ಕಾಣದೇ ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ತೆಗೆದುಕೊಂಡಿರುವ ಸಾಲವನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ.
ರಾಜ್ಯ ಸರ್ಕಾರ ಸಹಕಾರ ಬ್ಯಾಂಕುಗಳಲ್ಲಿ ರೂ. 50 ಸಾವಿರ ಸಾಲ ಮನ್ನಾ ಮಾಡಿದೆ. ಅಂತೆಯೇ ಕೇಂದ್ರ ಸರ್ಕಾರವೂ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಎಸ್.ಅನಂತಕುಮಾರ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ರಾಜ್ಯದ ರೈತರ ನೈಜ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಕಾಳಜಿ ತೋರಿ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡುವ ಮೂಲಕ ರೈತರ ನೆರವಿಗೆ ಬರಬೇಕು ಎಂದರು.
ಪ್ರತಿಭಟನೆಯ ನೇತೃತ್ವವನ್ನು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್, ಕಾರ್ಯದರ್ಶಿ ಎಸ್.ಸಿ.ಶರತ್ ಶೇಖರ್, ಕಾರ್ಮಿಕ ಘಟಕ ರಾಜ್ಯಧ್ಯಕ್ಷ ಮುತ್ತಪ್ಪ, ಹೋಬಳಿ ಅಧ್ಯಕ್ಷ ಸಿ.ಬಿ.ಅಬ್ಬಾಸ್ ವಹಿಸಿದ್ದರು.
ಕಾಂಗ್ರೆಸ್ ಮುಖಂಡರಾದ ಮಿಥುನ್, ಹಮೀದ್, ಎಸ್.ಕೆ.ವೀರಪ್ಪ, ಮಹಮ್ಮದ್ ಪಾಶ, ಕುಮುದಾ ಧರ್ಮಪ್ಪ, ಲೀಲಾದಾಸ್, ರಾಜಮ್ಮರುದ್ರಯ್ಯ, ಶುಕ್ಲಾಂಬರ್, ಬಿ.ಟಿ.ರಂಗಸ್ವಾಮಿ, ಗೋಪಾಲಪುರ ಹರೀಶ್, ಸಿ.ಜೆ.ಗಿರೀಶ್, ಎಸ್.ಕೆ.ಶಿವಪ್ಪ, ವಿ.ಟಿ.ನಾಗರಾಜ್, ಅಬ್ಬಾಸ್ ಇತರರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.