ಕಲಬುರ್ಗಿ: ‘ರಾಜಕೀಯ ಪಕ್ಷಗಳೊಂ ದಿಗೆ ಒಡನಾಟ ಇಟ್ಟುಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಪಟ್ಟಿಯನ್ನು ಗೌಪ್ಯವಾಗಿ ಸಿದ್ಧಪಡಿಸುತ್ತಿರುವ ಶಿಕ್ಷಣ ಇಲಾಖೆ ಕ್ರಮ ಖಂಡನೀಯ’ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.
‘ಶಿಕ್ಷಕರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬಾರದು ಎಂದು ಹೇಳುವುದು ಸರಿಯಲ್ಲ. ರಾಜಕೀಯ ದುರುದ್ದೇಶ ದಿಂದ ಶಿಕ್ಷಣ ಸಚಿವರು ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಆರೋಗ್ಯಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಚಳವಳಿ ಹಿಂದಿನಿಂದ ನಡೆದುಕೊಂಡು ಬಂದಿವೆ. ಆದರೆ ಅದನ್ನು ಹತ್ತಿಕ್ಕುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಇಂತಹ ನಿರ್ಧಾರಕ್ಕೆ ಮುಂದಾಗಿದೆ. ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘ ಟನೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ಕಾಲೇಜು ಉಪನ್ಯಾಸಕರ ಪಟ್ಟಿ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಶಿಕ್ಷಕರು, ಉಪನ್ಯಾಸಕರ ಮೇಲೆ ವಿಶ್ವಾಸವಿಡದ ಸರ್ಕಾರ ಸಂಘಟನೆಗಳನ್ನು ಮಟ್ಟ ಹಾಕಲು ಹೊರಟಿ ರುವುದು ಒಳ್ಳೆಯ ಬೆಳವಣಿಗೆಯಲ್ಲ. ರಾಜಕೀಯ ದಬ್ಬಾಳಿಕೆಯಿಂದ ಶಿಕ್ಷಕರನ್ನು ಬೆದರಿಸಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು’ ಎಂದು ಹೇಳಿದರು.
‘ಶಾಲೆಗಳು ಆರಂಭವಾಗಿ ಒಂದೂ ವರೆ ತಿಂಗಳು ಕಳೆದರೂ ಪಠ್ಯ ಪುಸ್ತಕ ಗಳು ಸಮರ್ಪಕವಾಗಿ ಪೂರೈಕೆಯಾಗಿಲ್ಲ. ಪೂರೈಕೆ ಆಗಿರುವ ಪಠ್ಯ ಪುಸ್ತಕಗಳಲ್ಲಿ ಹಲವಾರು ತಪ್ಪುಗಳು, ವ್ಯಾಕರಣ ದೋಷಗಳು, ತಪ್ಪು ಅನುವಾದ ಉಳಿದುಕೊಂಡಿವೆ. ಇದರಿಂದಾಗಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೂಡಲೇ ಈ ತಪ್ಪುಗಳನ್ನು ಸರಿಪಡಿಸಬೇಕು’ ಎಂದು ಆಗ್ರಹಿಸಿದರು.
‘ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕರ್ನಾಟಕ ವಿಶ್ವವಿದ್ಯಾಲಯ ಕಾಯ್ದೆ ತಿದ್ದುಪಡಿ ಮಸೂದೆ ಜಾರಿಗೆ ತರುವ ಮೂಲಕ ರಾಜ್ಯಪಾಲರನ್ನು ಕೇವಲ ಘಟಿಕೋತ್ಸವಕ್ಕೆ ಸೀಮಿತಗೊಳಿಸಲು ಮುಂದಾಗಿದ್ದಾರೆ. ಈ ಕಾಯ್ದೆ ಜಾರಿಗೆ ಬಂದಲ್ಲಿ ನೇಮಕಾತಿಯಲ್ಲಿ ಅನ್ಯಾಯವಾಗುತ್ತದೆ. ಆದ್ದರಿಂದ ಕಾಯ್ದೆ ಜಾರಿಗೂ ಮುನ್ನ ಸಾರ್ವಜನಿಕರು, ಶಿಕ್ಷಣ ತಜ್ಞರೊಂದಿಗೆ ಬಹಿರಂಗ ಚರ್ಚೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದರು. ಮಾಜಿ ಶಾಸಕ ಶಶೀಲ್ ಜಿ.ನಮೋಶಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.