ಬೆಳಗಾವಿ: ಉತ್ತರ ಕರ್ನಾಟಕದ ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಕಾರ್ಯತಂತ್ರ ರೂಪಿಸಲು ಇದೇ ತಿಂಗಳ 22ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆ.ಎಲ್.ಇ ಸಂಸ್ಥೆಯ ಜೀರಗೆ ಸಭಾಗೃಹದಲ್ಲಿ ಸಭೆ ಕರೆಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ವಹಿಸಿಕೊಳ್ಳಲಿದ್ದಾರೆ. ಸಂಸದ ಸುರೇಶ ಅಂಗಡಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವೈ. ಸಂಕನೂರ, ಹನುಮಂತ ನಿರಾಣಿ ಸೇರಿದಂತೆ ಮಠಾಧೀಶರು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ ಎಂದು ಅವರು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಉತ್ತರ ಕರ್ನಾಟಕದ ಭಾಗದಲ್ಲಿ ಸರ್ಕಾರಿ ಶಾಲೆಗಳಿಗಿಂತ ಹೆಚ್ಚಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳೇ ಶಿಕ್ಷಣ ಪ್ರಸಾರ ಮಾಡಿವೆ. ಆದರೆ, ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಮಲತಾಯಿ ಧೋರಣೆ ಮಾಡುತ್ತಿವೆ ಎಂದು ಆರೋಪಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿರುವ ಭೋದಕ ಹಾಗೂ ಭೋದಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುತ್ತಿಲ್ಲ. ಇದಲ್ಲದೇ. ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಹಲವು ಬಾರಿ ಒತ್ತಾಯಿಸಿದ್ದರೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಇದರ ವಿರುದ್ಧ ಹೋರಾಟ ಮಾಡಲು ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು.
ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರಿಗೆ ಮನವಿ ನೀಡಿ ಆರು ತಿಂಗಳು ಗತಿಸಿದ್ದರೂ ಸ್ಪಂದನೆ ದೊರೆತಿಲ್ಲ ಎಂದು ಅವರು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುವ ಸೌಲಭ್ಯಗಳನ್ನು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿಲ್ಲ. ಶಿಕ್ಷಣ ಸಂಸ್ಥೆಗೆ ಅಲ್ಲ, ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯಗಳಿವು. ಆದರೆ, ಸರ್ಕಾರವು ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಶಿಕ್ಷಕರ ಬೇಡಿಕೆಯಾದ ಕಾಲ್ಪನಿಕ ವೇತನ ಬಡ್ತಿ, ಆರೋಗ್ಯ ಸೇವೆ, ಎನ್ಪಿಎಸ್ ಸೌಲಭ್ಯಗಳನ್ನು ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ನೀಡಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.