ನವದೆಹಲಿ: ‘ಗೋ ರಕ್ಷಕ ಗುಂಪುಗಳಿಗೆ ಸರ್ಕಾರದ ಯಾವುದೇ ರೀತಿಯ ಬೆಂಬಲವಿಲ್ಲ. ಕಾನೂನಿನ ಪ್ರಕಾರ ದೇಶದ ಯಾವ ರಾಜ್ಯಗಳಲ್ಲೂ ಗೋ ರಕ್ಷಕ ಗುಂಪುಗಳಿಗೆ ಜಾಗವಿಲ್ಲ’ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಶುಕ್ರವಾರ ತಿಳಿಸಿದೆ.
ಕೇಂದ್ರ ಸರ್ಕಾರದ ಈ ಹೇಳಿಕೆಯನ್ನು ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ವಿಭಾಗೀಯ ಪೀಠವು, ಗೋ ರಕ್ಷಕ ಗುಂಪುಗಳನ್ನು ನಿಯಂತ್ರಿಸಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ದೇಶದ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
‘ಗೋ ರಕ್ಷಣೆಯ ಹೆಸರಿನಲ್ಲಿ ಕೆಲವು ಗುಂಪುಗಳು ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಹಲ್ಲೆ ನಡೆಸುತ್ತಿವೆ. ಕೇಂದ್ರ ಸರ್ಕಾರ ಗೋ ರಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಗೋ ರಕ್ಷಕ ಗುಂಪುಗಳನ್ನು ನಿಷೇಧಿಸಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವ ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ನಿರ್ದೇಶನ ನೀಡಿದೆ.
ಈ ಮಧ್ಯೆ, ಗೋ ರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ಗೆ ತಿಳಿಸಿವೆ.