ಕೊಲಂಬೊ: ನ್ಯೂಮೊನಿಯಾದಿಂದ ಬಳಲುತ್ತಿರುವ ಶ್ರೀಲಂಕಾ ತಂಡದ ನಾಯಕ ದಿನೇಶ್ ಚಾಂಡಿಮಲ್ ಅವರು ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಅವರು ಭಾರತ ಎದುರಿನ ಸರಣಿಯ ಮೊದಲ ಟೆಸ್ಟ್ನಲ್ಲಿ ಕಣಕ್ಕಿಳಿಯುವುದಿಲ್ಲ.
ಜುಲೈ 26 ರಿಂದ ಗಾಲ್ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಅದರಲ್ಲಿ ಅನುಭವಿ ಸ್ಪಿನ್ನರ್ ರಂಗನಾ ಹೆರಾತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.
‘ಚಾಂಡಿಮಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಅವರು ಮೊದಲ ಟೆಸ್ಟ್ನಲ್ಲಿ ಆಡುವುದಿಲ್ಲ’ ಎಂದು ಆಯ್ಕೆ ಸಮಿತಿಯ ಮುಖ್ಯಸ್ಥ ಸನತ್ ಜಯಸೂರ್ಯ ತಿಳಿಸಿದ್ದಾರೆ.
ಈಚೆಗೆ ಜಿಂಬಾಬ್ವೆ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಶ್ರೀಲಂಕಾ ತಂಡವು ಸೋತಾಗ ಏಂಜೆಲೊ ಮ್ಯಾಥ್ಯೂಸ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆ ನಂತರ ಚಾಂಡಿಮಲ್ ಅವರನ್ನು ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.