ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಯೊಬ್ಬ ಬಂಧಿಸಲು ಬಂದಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಮೇಲೆ ಕಾರು ಹರಿಸಿ ಅವರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಗುರುವಾರ ಬೆಳಿಗ್ಗೆ ಇಲ್ಲಿನ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗ್ರೆಯಲ್ಲಿ ನಡೆದಿದೆ.
ಪಣಂಬೂರು ಪೊಲೀಸ್ ಠಾಣೆಯ ಎಎಸ್ಐ ಪುರಂದರ ಗೌಡ ಅವರ ಮೇಲೆ ಕಾರು ಹರಿಸಲು ಯತ್ನಿಸಿದ ರೌಡಿಶೀಟರ್ ಚಂದು ಹಾರೀಸ್ ಮತ್ತು ಆತನ ಸಹಚರ ಆದಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಚಂದು ಮತ್ತು ಆತನ ತಂಡದ ಸದಸ್ಯರು ದರೋಡೆಗೆ ಹೊಂಚು ಹಾಕುತ್ತಿದ್ದ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಮೂರು ತಂಡಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು.
ಆರೋಪಿಗಳು ಬರುತ್ತಿದ್ದ ಕಾರನ್ನು ಅಡ್ಡಗಟ್ಟಲು ಪುರಂದರ ಗೌಡ ನೇತೃತ್ವದ ತಂಡ ಮುಂದಾದಾಗ ಘಟನೆ ನಡೆದಿದೆ.