ಬೆಂಗಳೂರು: ‘ಮಕ್ಕಳು ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಗೆ ದೇಶದಲ್ಲಿ ದೊಡ್ಡ ಆಂದೋಲನ ರೂಪಿಸುವ ಅಗತ್ಯವಿದೆ’ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಸ್ ಸತ್ಯಾರ್ಥಿ ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಮಕ್ಕಳ ಅಪಹರಣ ಮತ್ತು ಅವರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ತಡೆಗಟ್ಟಲು ಪ್ರತಿಯೊಬ್ಬರೂ ಚಿಂತನೆ ನಡೆಸಬೇಕಿದೆ. ಈ ಸಂಬಂಧ ಆಂದೋಲನ ರೂಪಿಸುವ ಉದ್ದೇಶ ಇದೆ ಎಂದು ಹೇಳಿದರು.
‘ಮಕ್ಕಳ ಹಕ್ಕುಗಳ ರಕ್ಷಣೆಗೆ ಹತ್ತು ವರ್ಷಗಳ ಹಿಂದೆಯೇ ಯುನಿಸೆಫ್ ವರದಿ ನೀಡಿದೆ. ಅದನ್ನು ಆಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ’ ಎಂದರು.