ಅಹಮದಾಬಾದ್, ಮುಂಬೈ: ಮಹಾರಾಷ್ಟ್ರ, ಗುಜರಾತ್ನಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ಐವರು ಮೃತಪಟ್ಟಿದ್ದಾರೆ.
ಗುಜರಾತಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹ ಭೀತಿ ಎದುರಾಗಿದೆ. ಧಾರಾಕಾರ ಮಳೆಯಲ್ಲಿ ಸಿಲುಕಿ ಮೂರು ಮಂದಿ ಮೃತಪಟ್ಟಿದ್ದಾರೆ. 6 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ವಾಯುಪಡೆ ನೆರೆಯ ಪ್ರದೇಶಕ್ಕೆ ದೌಡಾಯಿಸಿದ್ದು, ಪ್ರವಾಹದಲ್ಲಿ ಸಿಲುಕಿರುವ 200ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಕಳೆದ 24 ಗಂಟೆಗಳಿಂದ ಸೌರಾಷ್ಟ್ರದಲ್ಲಿ ಮಳೆ ಅಬ್ಬರಿಸಿದೆ. ಇಲ್ಲಿನ ಎಲ್ಲಾ ನದಿಗಳು ತುಂಬಿ ಹರಿಯುತ್ತಿದ್ದು, ಈ ಋತುವಿನ ಶೇ 52ರಷ್ಟು ಮಳೆಯಾಗಿದೆ ಎಂದು ಗುಜರಾತಿನ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಹೇಳಿದ್ದಾರೆ.
ಮಳೆಗೆ ಸಿಲುಕಿ ಮೃತಪಟ್ಟವರು ರಾಜ್ಕೋಟ್ ಹಾಗೂ ಅಮರೇಲಿ ನಿವಾಸಿಗಳು ಎಂದು ತಿಳಿದು ಬಂದಿದೆ. ಅಲ್ಲದೇ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.