ವಿಜಯಪುರ: ಅಪರಾಧ ಪ್ರಕರಣಗಳು ನಡೆದಾಗ ಜನರು ತಮ್ಮಲ್ಲಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಬೇಕು. ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸಬ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ ಹೇಳಿದರು.
ಇಲ್ಲಿನ ಬಸವೇಶ್ವರ ನಗರದ ಗಣಪತಿ ದೇವಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಗಸ್ತು (ಬೀಟ್) ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರ ಸಹಕಾರ ದೊರೆತಾಗ ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಲು ಸಾಧ್ಯವಾಗುತ್ತದೆ. ಜನ ಮತ್ತು ಪೊಲೀಸ್ ಇಲಾಖೆ ನಡುವಿನ ಅಂತರ ಕಡಿಮೆ ಮಾಡಲು ಮತ್ತು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪಿಸಲು ಪೊಲೀಸ್ ಗಸ್ತು ಉತ್ತಮ ವ್ಯವಸ್ಥೆಯಾಗಿದೆ ಎಂದರು.
ಪುರಸಭಾ ಸದಸ್ಯ ಎಸ್.ಭಾಸ್ಕರ್ ಮಾತನಾಡಿ, ಜನರ ಬಳಿ ಪೊಲೀಸರು ಹೋಗುವುದು ಮತ್ತು ಪೊಲೀಸರು ಜನಸ್ನೇಹಿಗಳಾಗುವುದು ಸುಧಾರಿತ ಪೊಲೀಸ್ ಬೀಟ್ ವ್ಯವಸ್ಥೆಯ ಮೂಲ ಉದ್ದೇಶವಾಗಿದೆ. ಪೊಲೀಸ್ ವ್ಯವಸ್ಥೆ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕಾದರೆ ಇಲ್ಲಿನ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದರು.
ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿಯ ಜಿಲ್ಲಾ ಅಧ್ಯಕ್ಷ ನಾಗರಾಜ್ ಮಾತನಾಡಿ, ಅಪರಾಧ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡುವ ದೂರದೃಷ್ಟಿ, ತಳಹಂತದ ಸಿಬ್ಬಂದಿಗೂ ಜವಾಬ್ದಾರಿಯ ನೊಗ ಹೊರಿಸಿ ‘ಜನಸ್ನೇಹಿ’ ಪೊಲೀಸ್ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಗೃಹ ಇಲಾಖೆ ಮಹತ್ವದ ಹೆಜ್ಜೆಯಿರಿಸಿದೆ ಎಂದರು. ಬೀಟ್ ಪೊಲೀಸ್ ಕೃಷ್ಣನಾಯಕ್ ಅವರನ್ನು ಅಭಿನಂದಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಷ್ಠಾನದ ರಾಜ್ಯ ಸಂಚಾಲಕ ಬಿ.ಎಸ್ ಪ್ರವೀಣ್ ಕುಮಾರ್, ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ರಾಜ್ಯ ಅಧ್ಯಕ್ಷ ಕನ್ನಡ ಅಂಜಿನಪ್ಪ, ವೆಂಕಟೇಶ್, ಶ್ರೀನಿವಾಸ್, ಮಹೇಶ್ ಹಾಜರಿದ್ದರು.