ಗುರುಮಠಕಲ್: ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮುದನೂರಿನಲ್ಲಿ ಈಚೆಗೆ ನಡೆದ ಕೋಲಿ ಸಮಾಜದ ಮೂವರ ಹತ್ಯೆಯನ್ನು ಖಂಡಿಸಿ ಸೋಮವಾರ ಪಟ್ಟಣದಲ್ಲಿ ಕೋಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಗಾಂಧಿ ಮೈದಾನದಿಂದ ವಿಶೇಷ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಿಶೇಷ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಮುದನೂರಿನಲ್ಲಿ ಕೋಲಿ ಸಮಾಜಕ್ಕೆ ಸೇರಿದ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯಿಂದ ಸಮಾಜದಲ್ಲಿ ಅಭದ್ರತೆ ಕಾಡುತ್ತಿದೆ. ಕೂಡಲೇ ಕೊಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಸಂತ್ರಸ್ತ ಕುಟುಂಬದಲ್ಲಿನ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಕೊಲೆಗೀಡಾದವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ಆರ್ಥಿಕ ಸಹಾಯ ನೀಡಬೇಕು ಎಂದು ಒತ್ತಾಯಿಸಿದರು.
ನಂತರ ಮಾತನಾಡಿದ ಗಂಗಾಮತ ಕೋಲಿ ಸಮಾಜದ ಗುರುಮಠಕಲ್ ಘಟಕದ ಅಧ್ಯಕ್ಷ ವೀರಪ್ಪ ಪಡಿಗೆ, ಕೋಲಿ ಸಮಾಜದ ಜನರ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನು ಸಮಾಜವು ಖಂಡಿಸುತ್ತದೆ ಎಂದು ಹೇಳಿದರು.