ಭಾರತೀನಗರ: ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಟೀಕಿಸಿದರು. ಸಮೀಪದ ಅಣ್ಣೂರು ಗ್ರಾಮದಲ್ಲಿ ಈಚೆಗೆ ಕೇಂದ್ರ ಸರ್ಕಾರದ ಸಾಧನೆ ಕುರಿತು ಜನರಿಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿಗಳ ಉಜ್ವಲ ಯೋಜನೆಯಡಿ ನೀಡಲಾಗುತ್ತಿರುವ ಗ್ಯಾಸ್ ಯೋಜನೆಗೆ ರಮ್ಯಾ ಜಾಹಿರಾತು ನೀಡುವ ಮೂಲಕ ರಾಜ್ಯ ಸರ್ಕಾರ ಕಳಪೆ ಪ್ರಚಾರದಲ್ಲಿ ತೊಡಗಿದೆ. ಅನ್ನಭಾಗ್ಯ ಯೋಜನೆ ಯಡಿಯೂರಪ್ಪ ಸರ್ಕಾರದಿಂದ ಮೂಡಿ ಬಂದಿದ್ದು, ಯೋಜನೆಗೆ ಕೇಂದ್ರ ₹ 29 ನೀಡಿ ಅಕ್ಕಿ ಖರೀದಿ ಮಾಡುತ್ತಿದೆ. ರಾಜ್ಯ ಸರ್ಕಾರ ಈ ಅಕ್ಕಿಯನ್ನು ಅನ್ನಭಾಗ್ಯ ರೂಪದಲ್ಲಿ ₹ 3ಕ್ಕೆ ನೀಡುತ್ತಿದೆ ಎಂದು ಹೇಳಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸತ್ಯವನ್ನು ಮರೆಮಾಚಿ ಪ್ರಚಾರಕ್ಕೆ ಒತ್ತು ನೀಡಿದ್ದಾರೆ. ಯಾವುದೇ ಜನಪರ ಯೋಜನೆಗಳನ್ನು ಜಾರಿಗೆ ತರದ ಇವರು ಯಾವ ನೈತಿಕತೆ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿದರು. ಸರ್ಕಾರಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು. ಕೇಂದ್ರ ಸರ್ಕಾರದ ಸಾಧನೆಯ ಹಾಗೂ ರಾಜ್ಯಸರ್ಕಾರದ ವೈಫಲ್ಯಗಳ ಬಗ್ಗೆ ತಿಳಿಸಲು ಮನೆಮನೆಗೆ ತೆರಳಿ ಕೈಪಿಡಿಯನ್ನು ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಲ್ಲಿಕಾರ್ಜುನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ತಾಲ್ಲೂಕು ಘಟಕ ಉಪಾಧ್ಯಕ್ಷ ನಂದೀಶ್, ಯುವ ಮೋರ್ಚಾ ಉಪಾಧ್ಯಕ್ಷ ಸಂತೋಷ್, ಜಿ.ಪಂ. ಮಾಜಿ ಸದಸ್ಯ ವರದರಾಜು ಇದ್ದರು.