ಬೆಂಗಳೂರು: ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ನ ರೂಪುರೇಷೆಯನ್ನು ಕೇಂದ್ರ ಯೋಜನಾ ಮಂಡಳಿ ಮಾಜಿ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಗುರುವಾರ ಪರಿಶೀಲಿಸಿದರು.
ಪಠ್ಯಕ್ರಮ, ಬೋಧನಾ ಗುಣಮಟ್ಟ, ಪ್ರಾಧ್ಯಾಪಕರ ಆಯ್ಕೆ ಸೇರಿ ಶೈಕ್ಷಣಿಕ ವರ್ಷ ಆರಂಭಕ್ಕೆ ಬೇಕಾದ ಸಿದ್ಧತೆ ಪರಿಶೀಲಿಸಲು ಅವರು ಬೆಂಗಳೂರಿಗೆ ಬಂದಿದ್ದರು. ಇಡೀ ದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
‘ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಶೈಕ್ಷಣಿಕ ಮಂಡಳಿ ಮುಖ್ಯಸ್ಥರಾಗಲು ಅಹ್ಲುವಾಲಿಯಾ ಒಪ್ಪಿದ್ದಾರೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ಇದನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ’ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಭೇಟಿ: ಅಹ್ಲುವಾಲಿಯಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದರು.
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ನ ಅಗತ್ಯ ಮತ್ತು ಅದನ್ನು ಯಾವ ರೀತಿ ಬೆಳೆಸಬೇಕು ಎಂಬ ಗುರಿಗಳ ಬಗ್ಗೆ ಸಿದ್ದರಾಮಯ್ಯ ಅವರು ಅಹ್ಲುವಾಲಿಯಾ ಅವರಿಗೆ ವಿವರಿಸಿದರು. ಈ ಸಂಬಂಧ ಅಗತ್ಯ ಸಲಹೆ, ಸೂಚನೆಗಳನ್ನು ನೀಡುವಂತೆಯೂ ಕೋರಿದರು.