ರಾಮನಗರ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ‘ಆಪರೇಷನ್ ಕಮಲ’ ಭೀತಿಯಿಂದ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕಕ್ಕೆ ಕಳುಹಿಸಿಕೊಟ್ಟಿರುವ ಗುಜರಾತ್ ಶಾಸಕರಿಗೆ ಬಿಡದಿಯಲ್ಲಿರುವ ಈಗಲ್ಟನ್ ರೆಸಾರ್ಟ್ನಲ್ಲಿ ಆತಿಥ್ಯ ಕಲ್ಪಿಸಲಾಗಿದೆ.
ಅಹಮದಾದ್ನಿಂದ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಶಾಸಕರು ಶನಿವಾರ ಮುಂಜಾನೆ 4.20ರ ಸುಮಾರಿಗೆ ಬಿಡದಿಯಲ್ಲಿರುವ ಈಗಲ್ಟನ್ ರೆಸಾರ್ಟ್ ಪ್ರವೇಶಿಸಿದರು.
ಈಗಲ್ಟನ್ ರೆಸಾರ್ಟಿನಲ್ಲಿ ಸದ್ಯ ಗುಜರಾತಿನ 38 ಕಾಂಗ್ರೆಸ್ ಶಾಸಕರು ಬೀಡು ಬಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಈ ಎಲ್ಲ ಶಾಸಕರ ಆತಿಥ್ಯದ ಉಸ್ತುವಾರಿ ಹೊತ್ತಿದ್ದಾರೆ. ರೆಸಾರ್ಟಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡರು ಅವರಿಗೆ ಸಾಥ್ ನೀಡಿದ್ದಾರೆ.
ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಯ ಮೂರು ಸ್ಥಾನಗಳಿಗೆ ಆಗಸ್ಟ್ 8ರಂದು ಮತದಾನ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರು ಕಣದಲ್ಲಿದ್ದಾರೆ.
ಅಹ್ಮದ್ ಪಟೇಲ್ ಅವರನ್ನು ಸೋಲಿಸಲೇಬೇಕು ಎಂದು ಹಟ ತೊಟ್ಟಿರುವ ಅಮಿತ್ ಷಾ, ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಿ, ಆ ಪಕ್ಷದ ಬಲ ಕುಗ್ಗಿಸಲು ತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಕಾಂಗ್ರೆಸ್, ರೆಸಾರ್ಟ್ ರಾಜಕಾರಣದ ಮೊರೆಹೋಗಿದ್ದು, ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದೆ.